ಮೈತ್ರಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಐಟಿ ಅಧಿಕಾರಿಗಳಿಂದ ದೂರು
ಫೈಲ್ ಚಿತ್ರ
ಬೆಂಗಳೂರು, ಎ.9: ಇತ್ತೀಚಿಗೆ ಕೆಲವರ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್-ಜೆಡಿಎಸ್ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಐಟಿ ದೂರು ಸಲ್ಲಿಸಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರ ವಿರುದ್ಧ ಐಟಿ ಅಧಿಕಾರಿಗಳು ದೂರು ನೀಡಿದ್ದಾರೆ.
ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅನುಮತಿ ಪಡೆಯದೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಕಾನೂನು ಬಾಹಿರ. ಹೀಗಾಗಿ ಅವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ದಾಖಲೆಗಳ ಸಮೇತ ದೂರು ಸಲ್ಲಿಸಿದೆ.
ಯಾವುದೇ ರಾಜಕೀಯ ಪಕ್ಷಗಳು, ಸಂಘಸಂಸ್ಥೆಗಳು, ಸಂಘಟನೆಗಳು ಸೇರಿದಂತೆ ಯಾರೇ ಪ್ರತಿಭಟನೆ ನಡೆಸಬೇಕಾದರೆ ಮೊದಲು ಅನುಮತಿ ಪಡೆಯಬೇಕು. ಆದರೆ, ಮೈತ್ರಿ ಪಕ್ಷದ ನಾಯಕರು ಅನುಮತಿಯನ್ನೂ ಪಡೆಯದೆ ಏಕಪಕ್ಷೀಯವಾಗಿ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ. ಸ್ವಾಯತ್ತ ಸಂಸ್ಥೆಗಳ ಮೇಲೆ ಈ ರೀತಿ ಪ್ರತಿಭಟನೆ ನಡೆಸುವುದು ಕಾನೂನಿಗೆ ವಿರುದ್ಧ. ನೀತಿಸಂಹಿತೆ ಜಾರಿಯಾಗಿರುವಾಗ ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ಕರ್ನಾಟಕ ಗೋವಾ ಐಟಿ ಇಲಾಖೆಯ ಮಹಾನಿರ್ದೇಶಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ.