ಅಂಬೇಡ್ಕರ್ ಕೊಡುಗೆ ಶೋಷಿತರಿಗೆ ಮಾತ್ರ ಸೀಮಿತವಾಗಿಲ್ಲ: ಅಕ್ಕಯ್ಯಮ್ಮ ಮುನಿಯಪ್ಪ
ಬೆಂಗಳೂರು, ಎ.14: ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಕೊಡುಗೆಗಳು ಶೋಷಿತರಿಗೆ ಮಾತ್ರ ಸೀಮಿತವಾಗಿಲ್ಲ ಎಂದು ಕೆಪಿಸಿಸಿ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಕ್ಕಯ್ಯಮ್ಮ ಮುನಿಯಪ್ಪ ಹೇಳಿದರು.
ರವಿವಾರ ಕಬ್ಬನ್ ಪಾರ್ಕ್ನ ಎನ್ಜಿಒ ಸಭಾಂಗಣದಲ್ಲಿ ಪ್ರಜಾ ವಿಮೋಚನಾ ಚಳವಳಿ ಸಮತವಾದ ಆಯೋಜಿಸಿದ್ದ, ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 128ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಂಬೇಡ್ಕರ್ ಅವರು ನೀಡಿದ ಕೊಡುಗೆಗಳು ಶೋಷಿತರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳಾ ಸಮಾನತೆ, ಕಾರ್ಮಿಕ ಹಕ್ಕುಗಳು, ಅಲ್ಪಸಂಖ್ಯಾತರ ರಕ್ಷಣೆ ಅವರು ನೀಡಿದ ಕೊಡುಗೆಗಳು ಅಪಾರವಾಗಿವೆ ಎಂದು ಹೇಳಿದರು.
ಸಂಘದ ಅಧ್ಯಕ್ಷ ಇಂಡ್ಲವಾಡಿ ಬಸವರಾಜು ಮಾತನಾಡಿ, ಜಗತ್ತಿನ ಶ್ರೆಷ್ಠ ಜ್ಞಾನಿಯಾಗಿದ್ದ ಅಂಬೇಡ್ಕರ್ ಅವರು ತಮ್ಮ ಪ್ರತಿಭೆಯನ್ನು ಮನುಕುಲದ ಉದ್ಧಾರಕ್ಕಾಗಿ ಮುಡಿಪಾಗಿಟ್ಟರು. ಅವರ ಆದರ್ಶಗಳನ್ನು ನಾವೆಲ್ಲ ಅಳವಡಿಸಿ ಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಜಾಲಕಿಟ್ಟಿ, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಸಿ.ಮುನಿಯಪ್ಪ ಸೇರಿದಂತೆ ಪ್ರಮುಖರಿದ್ದರು.