ಕಸಾಪ ಅಧಿಕಾರಾವಧಿ ವಿಸ್ತರಣೆ ವಿಚಾರ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು, ಎ.15: ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರ ಅಧಿಕಾರದ ಅವಧಿಯನ್ನು 3 ವರ್ಷದಿಂದ 5 ವರ್ಷಗಳಿಗೆ ವಿಸ್ತರಿಸುವ ನಿರ್ಣಯ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ಈ ಸಂಬಂಧ ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಕೊ.ವೆಂ.ರಾಮಕೃಷ್ಣೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಅಲೋಕ ಆರಾಧೆ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು, ಸಂವಿಧಾನದ ಚೌಕಟ್ಟಿನಲ್ಲಿ ಪರಿಷತ್ತು ಕಾರ್ಯನಿರ್ವಹಿಸಬೇಕಾಗುತ್ತದೆ. ಆದರೆ, ಅಧಿಕಾರಾವಧಿಯ ವಿಚಾರವನ್ನು ಬೆಂಗಳೂರಿನಿಂದ ದೂರವಿರುವ ಕೋಟ ಗ್ರಾಮದಲ್ಲಿ ಕೆಲಸದ ದಿನವಾದ ಗುರುವಾರ ಕರೆದು ಅಂಗೀಕರಿಸುವುದು ಸಮಂಜಸವಾಗಿಲ್ಲ. ಹೀಗಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಅವಧಿ ಸದ್ಯದಲ್ಲಿಯೆ ಮುಕ್ತಾಯಗೊಳ್ಳುತ್ತಿರುವುದರಿಂದ ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣದ ತೀರ್ಪನ್ನು ವಜಾಗೊಳಿಸಿ ಕೂಡಲೆ ಪರಿಷತ್ತಿಗೆ ಹೊಸದಾಗಿ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠ ಆದೇಶವನ್ನು ಕಾಯ್ದಿರಿಸಿತು.