ಬೆ.ದಕ್ಷಿಣ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಶಾಶ್ವತ ಪರಿಹಾರ: ಬಿ.ಕೆ.ಹರಿಪ್ರಸಾದ್
ಬೆಂಗಳೂರು, ಎ.16: ಲೋಕಸಭಾ ಚುಣಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಕ್ಷೇತ್ರದ ದೊರೆಸಾನಿ ಪಾಳ್ಯದ ಚರ್ಚಿನಿಂದ ಪ್ರಾರಂಭವಾದ ರೋಡ್ ಶೋ ದಕ್ಷಿಣ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಂಚರಿಸಿ, ಕ್ಷೇತ್ರದ ಅಭಿವೃದ್ದಿಗೆ ತಾವು ತಯಾರಿಸಿರುವ ಪ್ರಣಾಳಿಕೆಯನ್ನು ವಿವರಿಸಿದರು.
ಮೇಕೆದಾಟು ಹಾಗೂ ಎತ್ತಿನಹೊಳೆ ಯೋಜನೆಯ ಫಲದಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬೋಟಾನಿಕಲ್ ಗಾರ್ಡನ್ ನಿರ್ಮಿಸಲಾಗುವುದು, ಹೊರವರ್ತುಲ ರಸ್ತೆಗೂ ಆಚೆಗೆ ಮೆಟ್ರೋ ರೈಲನ್ನು ವಿಸ್ತರಣೆ ಹಾಗೂ ಮೋನೋರೈಲ್ ಸೌಲಭ್ಯವನ್ನು ಅಳವಡಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ವಿಶ್ವ ಗುಣಮಟ್ಟದ ಕನ್ವೆನ್ಷನ್ ಸೆಂಟರ್ ನಿರ್ಮಾಣ, ಸ್ಯಾಂಕಿ ಕೆರೆಯ ರೀತಿಯಲ್ಲಿ ಕ್ಷೇತ್ರದ ಕೆರೆಗಳ ಅಭಿವೃದ್ದಿ, ಅಂತರ್ರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣ, ಚಿಕ್ಕ ರಸ್ತೆಗಳಲ್ಲಿ ಸಂಚಾರ ದಟ್ಟಣೆಗೆ ಮುಕ್ತಿನೀಡಲು ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ನಿರ್ಮಾಣವೂ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಬದ್ಧನಾಗಿದ್ದೇನೆ ಎಂದು ಅವರು ಆಶ್ವಾಸನೆ ನೀಡಿದರು.
ಕಳೆದ 5 ವರ್ಷಗಳಲ್ಲಿ ಯಾವುದೇ ಅಭಿವೃದ್ದಿ ಕ್ರಮಗಳನ್ನು ಕೈಗೊಳ್ಳದೆ ಕೇವಲ ಕೋಮುವಾದಕ್ಕೆ ಒತ್ತು ನೀಡಿದ ಬಿಜೆಪಿಯನ್ನು ತಿರಸ್ಕರಿಸಿ ಎಂದು ಅವರು ಮನವಿ ಮಾಡಿದರು. ರೋಡ್ ಶೋನಲ್ಲಿ ಯು.ಬಿ.ವೆಂಕಟೇಶ್, ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.