ಮುಖ್ಯಮಂತ್ರಿಯನ್ನು ಭೇಟಿಯಾದ ಶಾಸಕ ಬಿ.ನಾಗೇಂದ್ರ
ಬೆಂಗಳೂರು, ಎ.27: ಕಾಂಗ್ರೆಸ್ ಪಕ್ಷದ ಬಂಡಾಯ, ಅತೃಪ್ತ ಶಾಸಕರ ಬಣದಲ್ಲಿ ಗುರುತಿಸಿಕೊಂಡಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ, ಶನಿವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ನಾಗೇಂದ್ರ, ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಇವರಿಬ್ಬರ ನಡುವೆ ಯಾವ ವಿಚಾರದ ಕುರಿತು ಚರ್ಚೆ ನಡೆದಿದೆ ಎಂಬುದು ತಿಳಿದು ಬಂದಿಲ್ಲ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆ ಗುರುತಿಸಿಕೊಂಡಿದ್ದ ನಾಗೇಂದ್ರ, ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ಅಮಾನತುಗೊಂಡಿದ್ದಾರೆ. ಇವರ ಶಾಸಕ ಸ್ಥಾನವನ್ನು ಅನರ್ಹಗೊಳಿಸುವಂತೆ ಕೋರಿ ಕಾಂಗ್ರೆಸ್, ಸ್ಪೀಕರ್ಗೆ ಮನವಿ ಮಾಡಿದೆ.
ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೆ, ಮುಖ್ಯಮಂತ್ರಿಯನ್ನು ನಾಗೇಂದ್ರ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವ ನಾಗೇಂದ್ರ ಮನವೊಲಿಸಲು ಮುಖ್ಯಮಂತ್ರಿ ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.