ಬಿಬಿಎಂಪಿ: ನೀರು-ಬರದ ಹೆಸರಲ್ಲಿ 400 ಕೋಟಿ ಕಬಳಿಕೆ; ಎನ್.ಆರ್.ರಮೇಶ್ ಗಂಭೀರ ಆರೋಪ
ಬೆಂಗಳೂರು, ಮೇ 15: ನಗರದಲ್ಲಿ ನೀರಿಗಾಗಿ ತೀವ್ರ ಬರ ಉಂಟಾಗಿರುವ ಸಂದರ್ಭದಲ್ಲಿ ಬಿಬಿಎಂಪಿಯಿಂದ ಕೊಳವೆ ಬಾವಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣದ ಹೆಸರಿನಲ್ಲಿ 400 ಕೋಟಿ ರೂ.ಗಳಿಗೂ ಅಧಿಕ ಹಣವನ್ನು ಕಬಳಿಸಿದ್ದಾರೆ ಎಂದು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ಇಂದಿಲ್ಲಿ ಆರೋಪಿಸಿದ್ದಾರೆ.
ಬುಧವಾರ ನಗರದ ಖಾಸಗಿ ಹೊಟೇಲ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕಷ್ಟದ ಸಂದರ್ಭದಲ್ಲಿ ನೀರು ನೀಡಬೇಕಾದ ಪಾಲಿಕೆ ಅಧಿಕಾರಿಗಳು, ನೀರಿನ ಮೂಲಗಳ ನಿರ್ಮಾಣದ ಹೆಸರಿನಲ್ಲಿ ನೂರಾರು ಕೋಟಿ ಲೂಟಿ ಮಾಡಿರುವುದು ಸರಿಯಲ್ಲ. ಈ ಪ್ರಕರಣದಲ್ಲಿ 40 ಕ್ಕೂ ಅಧಿಕ ಕಾರ್ಪೋರೇಟರ್ಗಳು, ಅಧಿಕಾರಿಗಳು, ಗುತ್ತಿಗೆದಾರರು ಪಾಲ್ಗೊಂಡಿದ್ದಾರೆ. ಹೀಗಾಗಿ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.
ಬಿಬಿಎಂಪಿಯ ಐದು ವಲಯಗಳಲ್ಲಿನ 66 ವಾರ್ಡ್ಗಳಲ್ಲಿ ಕೊಳವೆ ಬಾವಿಗಳು ಕೊರೆಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣದಲ್ಲಿ ಅಕ್ರಮ ನಡೆದಿದೆ. ರಾಜರಾಜೇಶ್ವರಿ ನಗರ, ಯಶವಂತಪುರ, ಬೆಂಗಳೂರು ದಕ್ಷಿಣ, ಕೆ.ಆರ್.ಪುರಂ, ಬ್ಯಾಟರಾಯನಪುರ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ವಾರ್ಡ್ಗಳಲ್ಲಿ ಹಗರಣ ನಡೆದಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಪಾಲಿಕೆಯಿಂದ ಕಳೆದೆರಡು ವರ್ಷಗಳಿಂದ ಬೋರ್ವೆಲ್ ಕೊರೆಸಲು 671 ಕೋಟಿ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ 156 ಕೋಟಿ ಬಿಡುಗಡೆ ಮಾಡಲಾಗಿದೆ ಎಂದಿದೆ. ಎರಡು ವರ್ಷದಲ್ಲಿ 9,588 ಕೊಳೆವೆ ಬಾವಿಗಳನ್ನು ಕೊರೆಸಲಾಗಿದೆ ಹಾಗೂ 9,076 ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ ಎಂದ ಅವರು, ಈ ಎರಡೂ ಕಾಮಗಾರಿಗಳಿಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದರು.
ವಾಸ್ತವವಾಗಿ ಒಂದು ನೀರಿನ ಘಟಕ ನಿರ್ಮಾಣಕ್ಕೆ ತಗಲುವ ವೆಚ್ಚ 7.5 ಲಕ್ಷ ಮಾತ್ರ. ಆದರೆ, ಅಧಿಕಾರಿಗಳು 16 ಲಕ್ಷ ಎಂದು ಹೇಳಿದ್ದಾರೆ ಎಂದ ಅವರು, ಕೊಳವೆಬಾವಿಗಳನ್ನು ಕೊರೆಸದೇ, ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡದೇ ಕೋಟ್ಯಂತರ ರೂ.ಗಳಷ್ಟು ಹಣವನ್ನು ಕಬಳಿಸಿದ್ದಾರೆ. ಹೀಗಾಗಿ, ಇದರಲ್ಲಿ ಪಾಲ್ಗೊಂಡ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಎಲ್ಲ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಅವರ ಆಗ್ರಹಿಸಿದರು.
ನಗರದಾದ್ಯಂತ ಕುಡಿಯುವ ನೀರಿನ ಸಮಸ್ಯೆ ತೀವ್ರ ಸಂಕಷ್ಟದಲ್ಲಿದೆ. ಅಂತರ್ಜಲ ಕುಸಿದು ಹೋಗಿದ್ದು, ನೀರಿಲ್ಲದೆ ಟ್ಯಾಂಕರ್ಗಳ ಮೂಲಕ ನೀರನ್ನು ಸರಬರಾಜು ಮಾಡುತ್ತಿದ್ದಾರೆ. ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಒಂದಾಗಿ ಕುಡಿಯುವ ನೀರಿನ ಯೋಜನೆಯಲ್ಲಿ ಕೋಟ್ಯಂತರ ಹಣ ಲೂಟಿ ಮಾಡಿರುವುದು ಸಲ್ಲದು ಎಂದು ರಮೇಶ್ ಹೇಳಿದರು.
ಎಸಿಬಿ, ಲೋಕಾಯುಕ್ತಕ್ಕೆ ದೂರು
ಹೊಸ 5 ವಲಯಗಳ 5 ಜನ ಮುಖ್ಯ ಅಭಿಯಂತರರು, 5 ಜನ ಜಂಟಿ ಆಯುಕ್ತರು ಮತ್ತು 9 ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ವಿರುದ್ಧ ಎಸಿಬಿ, ಬಿಎಂಟಿಎಫ್, ಲೋಕಾಯುಕ್ತಕ್ಕೆ ದೂರು ನೀಡಿಲಾಗಿದ್ದು, ಹಗರಣದ 273 ಪುಟಗಳ ದಾಖಲೆ ನೀಡಲಾಗಿದೆ. ಈ ಹಗರಣ ಸಂಬಂಧಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಫೋನ್ ಮೂಲಕ ಸಂಪರ್ಕಿಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದರು.