ಬಿಡದಿ ಬಳಿ ಕಸ ವಿಲೇವಾರಿ ಖಂಡಿಸಿ ಪ್ರತಿಭಟನೆ
ಬೆಂಗಳೂರು, ಮೇ 21: ಬಿಡದಿಯ ಕೊಡಿಯಾಲ ಕರೇನಹಳ್ಳಿಯಲ್ಲಿ ನಗರದ ತ್ಯಾಜ್ಯ ವಿಲೇವಾರಿ ಮಾಡಲು ಬಿಬಿಎಂಪಿ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿ.ಡಿ.ಆರ್) ಪಡೆಯಲು ಮುಂದಾಗಿರುವುದನ್ನು ಖಂಡಿಸಿ ರೈತ ಹಿತರಕ್ಷಣಾ ಸಮಿತಿಯ ಸದಸ್ಯರು ಹಾಗೂ ರೈತರು ಪ್ರತಿಭಟನೆ ನಡೆಸಿದರು.
ಮಂಗಳವಾರ ನಗರದ ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರತಿಭಟನಾಕಾರರು, ಕಸ ವಿಲೇವಾರಿ ಕುರಿತಂತೆ ಈ ಹಿಂದೆ ಪ್ರತಿಭಟನೆ ಕೂಡ ನಡೆಸಲಾಗಿದ್ದು, ಶಾಸಕ ಎಚ್.ಸಿ.ಬಾಲಕೃಷ್ಣ ಅವರು ರೈತರ ಪರವಾಗಿ ಬೆಂಬಲಕ್ಕೆ ನಿಂತು ಹೋರಾಟ ಮಾಡಿದ್ದರು. ಸಿಎಂ ಎಚ್.ಡಿ.ಕುಮಾರಸ್ವಾಮಿ ರೈತರ ಹೋರಾಟಕ್ಕೆ ಬೆಂಬಲ ನೀಡಿ ರಾಮನಗರ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಕಸ ವಿಲೇವಾರಿ ಮಾಡಲು ಬಿಡುವುದಿಲ್ಲ ಎಂದು ಆಶ್ವಾಸನೆ ನೀಡಿದರು.
ಆದರೆ ಈಗ ಕೊಡಿಯಾಲ ಕರೇನಹಳ್ಳಿ ಗ್ರಾಮದಲ್ಲಿ 42 ಎಕರೆ ಜಮೀನನ್ನು ಖರೀದಿಸಿರುವ ಖಾಸಗಿ ವ್ಯಕ್ತಿಗಳು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದರಿಂದ ಬಿಬಿಎಂಪಿ ಸಹ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಟಿಡಿಆರ್ ರದ್ದು ಪಡಿಸಿತ್ತು. ಈಗ ಹಿಂಬಾಗಿಲಿನಿಂದ ಬಿಬಿಎಂಪಿಯಿಂದ ಟಿಡಿಆರ್ ಪತ್ರ ಪಡೆಯಲು ಖಾಸಗಿ ವ್ಯಕ್ತಿಗಳು ಮುಂದಾಗಿದ್ದಾರೆಂದು ಆರೋಪಿಸಿದರು.
ಇಲ್ಲಿ ಕಸ ಹಾಕುವುದರಿಂದ ರೈತರಿಗೆ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರಲಿದ್ದು, ಈ ಗ್ರಾಮಗಳ ಸುತ್ತುಮುತ್ತಲಿನಲ್ಲಿ ಬೆಂಗಳೂರಿನ ಕೊಳಚೆ ನೀರು ಹರಿಯುವ ವೃಷಭಾವತಿ ನದಿಯು ಸಹ ಇರುವುದರಿಂದ ಪ್ರವಾಸಿಗರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಸರಕಾರ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.