ಕಾವೇರಿ ನೀರು ಬಿಡುಗಡೆ ಆದೇಶ ಪುನರ್ ಪರಿಶೀಲನೆಯಾಗಲಿ: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಒತ್ತಾಯ
ಕುರುಬೂರು ಶಾಂತಕುಮಾರ್
ಬೆಂಗಳೂರು, ಮೇ 28: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ಜೂನ್ನಲ್ಲಿ ತಮಿಳುನಾಡಿಗೆ 9 ಟಿಎಂಸಿ ನೀರು ಬಿಡುಗಡೆ ಮಾಡಲು ಆದೇಶಿಸಿರುವುದು ಸರಿಯಾದ ಕ್ರಮವಲ್ಲ, ಇದನ್ನು ಪುನರ್ ಪರಿಶೀಲಿಸಬೇಕೆಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಕುಡಿಯುವ ನೀರು ಸೇರಿದಂತೆ ಜಾನುವಾರುಗಳಿಗೆ ಮೇವಿನ ಕೊರತೆ ಕಂಡುಬಂದಿದೆ. ಹವಾಮಾನ ಇಲಾಖೆ ಪ್ರಸಕ್ತ ಸಾಲಿನಲ್ಲಿ ಮಳೆಯ ಪ್ರಮಾಣ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ 9 ಟಿಎಂಸಿ ನೀರು ಹರಿಸಲು ಸಾಧ್ಯವಾಗದ ವಿಚಾರವಾಗಿದೆ.
ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕಾವೇರಿ ನೀರು ಅತಿ ಮುಖ್ಯವಾಗಿದೆ. ನೀರಿನ ವಿಚಾರದಲ್ಲಿ ರಾಜ್ಯದ ಪರಿಸ್ಥಿತಿ ತೀರ ಶೋಚನೀಯವಾಗಿದೆ. ಹೀಗಾಗಿ ರಾಜ್ಯ ಸರಕಾರ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯ ಆದೇಶವನ್ನು ಮರು ಪರಿಶೀಲನೆ ನಡೆಸಲು ಒತ್ತಾಯಿಸಬೇಕು. ಕಾವೇರಿ ಅಚ್ಚುಕಟ್ಟು ಭಾಗದ ಸಂಸದರು ಕೇಂದ್ರ ಸರಕಾರಕ್ಕೆ ಸ್ಪಷ್ಟವಾದ ಮಾಹಿತಿಯನ್ನು ನೀಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.