'ಮೆಜೆಸ್ಟಿಕ್' ಅಂಡರ್ ಪಾಸ್ನಲ್ಲಿ ಸ್ಥಳ ಅತಿಕ್ರಮಣ: ಸರಕಾರ, ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಮೇ 30: ಮೆಜೆಸ್ಟಿಕ್ ಬಸ್ ನಿಲ್ದಾಣದ ಅಂಡರ್ ಪಾಸ್ನಲ್ಲಿ ಬೀದಿ ಬದಿ ವ್ಯಾಪಾರಿಗಳು ಸ್ಥಳವನ್ನು ಅತಿಕ್ರಮಣ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಬಿಬಿಎಂಪಿ, ನಗರ ಪೊಲೀಸ್ ಆಯುಕ್ತ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ರವಿಕುಮಾರ್ ಕಂಚನಹಳ್ಳಿ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರ ರವಿಕುಮಾರ್ ಕಂಚನಹಳ್ಳಿ ಪರ ವಾದಿಸಿದ ವಕೀಲರು, ಮೆಜೆಸ್ಟಿಕ್ ಬಸ್ ನಿಲ್ದಾಣದ ಅಂಡರ್ಪಾಸ್ನಲ್ಲಿ ಬೀದಿ ಬದಿ ವ್ಯಾಪಾರಿಗಳು ಸ್ಥಳವನ್ನು ಅತಿಕ್ರಮಣ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ, ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿದೆ. ಹೀಗಾಗಿ, ಅತಿಕ್ರಮಣವನ್ನು ತೆರವುಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.