ದಲಿತರು ಹೋರಾಟ ನಿಲ್ಲಿಸಬಾರದು: ಡಾ.ಜಿ.ಪರಮೇಶ್ವರ್
ಬೆಂಗಳೂರು, ಜೂ.4: ಎಲ್ಲ ಕ್ಷೇತ್ರಗಳಲ್ಲೂ ದಲಿತ ಸಮುದಾಯಕ್ಕೆ ಸಮಾನತೆ ದೊರೆಯುವವರೆಗೂ ಹೋರಾಟ ನಿಲ್ಲಿಸಬಾರದೆಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಇಂದಿಲ್ಲಿ ತಿಳಿಸಿದರು.
ಇಲ್ಲಿನ ವಸಂತನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಮತಾ ಸೈನಿಕ ದಳ ಹಮ್ಮಿಕೊಂಡಿದ್ದ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆ ಹಾಗೂ ಎಂ.ವೆಂಕಟಸ್ವಾಮಿ ಅವರ ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲರಿಗೂ ಸಮಾನತೆ ದೊರೆಯುವಂತೆ ಕನಸು ಕಂಡಿದ್ದರು. ಹೀಗಾಗಿ, ಎಲ್ಲಿಯವರೆಗೂ ಸಮಾನತೆ ಸಾಧ್ಯವಾಗುವುದಿಲ್ಲವೋ, ಅಲ್ಲಿವರೆಗೂ ಈ ಸಮುದಾಯದ ಹೋರಾಟ ಮುಂದುವರೆಯಬೇಕು ಎಂದು ಹೇಳಿದರು.
ಈ ವ್ಯವಸ್ಥೆಯೊಳಗೆ ಎಲ್ಲರೂ ಸಮಾನವಾಗಿ ಬದುಕು ಕಟ್ಟಿಕೊಳ್ಳಬೇಕು ಎಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರದಲ್ಲೂ ದಲಿತ ಮಕ್ಕಳು ಓದಲು ಅವಕಾಶ ಕಲ್ಪಿಸಿಕೊಟ್ಟಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್. ಅವರು, ನಮ್ಮ ಸಮುದಾಯಕ್ಕೆ ಅಪಾರ ಕೊಡುಗೆ ನೀಡಿದ್ದು, ಯಾರೂ ಮರೆಯುವಂತಿಲ್ಲ ಎಂದು ಹೇಳಿದರು.
ಸಮತಾ ಸೈನಿಕ ದಳ ಅಧ್ಯಕ್ಷ ಎಂ.ವೆಂಕಟಸ್ವಾಮಿ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಕೈಗಾರಿಕೆಗಳ ಜನಕ, ಅವರು ಮೈಸೂರಿನಲ್ಲಿ ವಿಶ್ವವಿದ್ಯಾನಿಲಯ ಸ್ಥಾಪಿಸಿ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯುವಂತೆ ಮಾಡಿದರು. ಹೀಗಾಗಿ, ಸರಕಾರ ಅವರ ಜೀವನವನ್ನು ಪಠ್ಯದಲ್ಲಿ ಅಳವಡಿಸಬೇಕು. ಜೊತೆಗೆ ಅವರ ಜಯಂತಿ ದಿನದಂದು, ಸರಕಾರಿ ರಜೆ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.