ಕೆರೆಗಳ ಸುತ್ತಮುತ್ತ ಸಿಸಿ ಕ್ಯಾಮರಾ ಅಳವಡಿಕೆಗೆ ಹೈ ಆದೇಶ
ಬೆಂಗಳೂರು, ಜೂ.18: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕೆರೆಗಳ ಸುತ್ತಮುತ್ತ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಬಿಬಿಎಂಪಿ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು ಎಂದು ಕೋರಿ ಸಿಟಿಜನ್ಸ್ ಆಕ್ಷನ್ ಗ್ರೂಪ್ ಕಾರ್ಯದರ್ಶಿ ನೊಮಿತಾ ಚಾಂಡಿ ಹಾಗೂ ಜೆ.ಪಿ.ನಗರ 4ನೆ ಹಂತದ ಡಾಲರ್ಸ್ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಗುಂಡಾ ಭಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು.
ಕೆರೆಗಳ ಸುತ್ತಮುತ್ತ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು. ಕೆರೆ ಸಂರಕ್ಷಣೆ ಕುರಿತು ಜನರಲ್ಲಿ ಜನಜಾಗೃತಿಯನ್ನು ಮೂಡಿಸಬೇಕು. ಕೆರೆಗೆ ತ್ಯಾಜ್ಯ ಎಸೆಯುವ, ಕಲುಷಿತಗೊಳಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ನ್ಯಾಯಪೀಠವು ಬಿಬಿಎಂಪಿ, ರಾಜ್ಯ ಸರಕಾರಕ್ಕೆ ಆದೇಶಿಸಿತು. ವಿಗ್ರಹಗಳ ವಿಸರ್ಜನೆಗಾಗಿ ಹೆಚ್ಚುವರಿ ಸ್ಥಳಗಳನ್ನು ಗುರುತಿಸಿ, ವಿಸರ್ಜನೆ ಮಾಡಬೇಕು. ಅಲ್ಲದೆ, ಘನ ತ್ಯಾಜ್ಯ ನಿರ್ವಹಣಾ ನಿಯಮಗಳ 2016ರ ಬೈಲಾವನ್ನು ರೂಪಿಸದ ಬಗ್ಗೆ ವಿವರಣೆ ನೀಡಬೇಕು. ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನೆ(ನೀರಿ)ಯ ಶಿಫಾರಸ್ಸುಗಳನ್ನು ರಾಜ್ಯ ಸರಕಾರ, ಬಿಬಿಎಂಪಿಗೆ ವರದಿ ನೀಡಲಿ. ಆಮೇಲೆ ಆ ವರದಿ ಆಧಾರದ ಮೇಲೆ ಕೈಗೊಂಡ ಕ್ರಮಗಳ ಬಗ್ಗೆ ನ್ಯಾಯಪೀಠಕ್ಕೆ ಆ.5ರಂದು ವರದಿ ನೀಡಲು ಸೂಚಿಸಿತು.