ಪ್ರಧಾನಿ ಹೆಸರಿನ ನಕಲಿ ಪತ್ರ ನೀಡಿದ್ದ ಆರೋಪಿಗೆ ಹೈಕೋರ್ಟ್ ಜಾಮೀನು
ಬೆಂಗಳೂರು, ಜು.14: ಕರ್ನಾಟಕ ಹೈಕೋರ್ಟ್ನಲ್ಲಿ ಬೆರಳಚ್ಚುಗಾರ ಉದ್ಯೋಗ ಗಿಟ್ಟಿಸಲು ಪ್ರಧಾನಿ ಮಂತ್ರಿ ಶಿಫಾರಸ್ಸಿನ ನಕಲಿ ಪತ್ರ ನೀಡಿ ಬಂಧನಕ್ಕೆ ಒಳಗಾಗಿ ಜೈಲುಪಾಲಾಗಿದ್ದ ವ್ಯಕ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಬೆಳಗಾವಿ ಖಾನಾಪುರದ ನಿವಾಸಿ ಸಂಜಯ್ಕುಮಾರ್ ಎ ಹುಡೇದ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಏಕಸದಸ್ಯ ನ್ಯಾಯಪೀಠ ಅರ್ಜಿದಾರನಿಗೆ ಷರತ್ತು ಬದ್ಧ ಜಾಮೀನು ನೀಡಿ ಬಿಡುಗಡೆಗೆ ಆದೇಶಿಸಿದೆ. ಆರೋಪಿ ಸಂಜಯ್ ಕುಮಾರ್ ಸಂಬಂಧಪಟ್ಟ ನ್ಯಾಯಾಲಯಕ್ಕೆ ಒಂದು ಲಕ್ಷ ರೂ.ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತಾ ಖಾತರಿ ಒದಗಿಸಬೇಕು. ಪ್ರಕರಣದ ತ್ವರಿತ ಇತ್ಯರ್ಥಕ್ಕಾಗಿ ಆರೋಪಿಯು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸಬೇಕು. ಪ್ರಕರಣದ ಸಾಕ್ಷಾಧಾರಗಳನ್ನು ತಿರುಚಲು ಯತ್ನಿಸಬಾರದು. ಒಂದೊಮ್ಮೆ ವಿಳಾಸ ಬದಲಿಸಿದ ಸಂದರ್ಭದಲ್ಲಿ ಆ ಕುರಿತು ಠಾಣಾಧಿಕಾರಿಗೆ ಮಾಹಿತಿ ನೀಡಬೇಕು. ಇದೇ ಮಾದರಿಯ ಇತರೆ ಪ್ರಕರಣಗಳಲ್ಲಿ ಪಾಲ್ಗೊಳ್ಳಬಾರದು ಎಂದು ಜಾಮೀನು ಮಂಜೂರಾತಿಗೆ ಷರತ್ತು ವಿಧಿಸಿದೆ.