ಇಂದು ಬಸ್ ದಿನ
ಬೆಂಗಳೂರು, ಮೇ 3: ಬಿಎಂಟಿಸಿ ವತಿಯಿಂದ ಮೇ 4ರಂದು ಹಮ್ಮಿಕೊಂಡಿರುವ 76ನೆ ಬಸ್ ದಿನಾಚರಣೆ ಕಾರ್ಯಕ್ರಮಕ್ಕೆ ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮ ಸಂದರ್ಭದಲ್ಲಿ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು ವೈದ್ಯಕೀಯ ಚಿಕಿತ್ಸಾ ಘಟಕ ಹಾಗೂ 108 ಆ್ಯಂಬುಲೆನ್ಸ್ ಸೇವೆಗೆ ಅಧಿಕೃತ ಚಾಲನೆ ಸಿಗಲಿದೆ. ಅಲ್ಲದೆ ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮದಡಿ ಬಸ್ ಚಾಲಕ ಸಿಬ್ಬಂದಿಗಳಿಗೆ ಹಾಗೂ ಪ್ರಯಾಣಿಕರಿಗೆ ಕರಪತ್ರ ಹಂಚುವ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ ಯು.ಟಿ.ಖಾದರ್, ಸಂಸದ ಪಿ.ಸಿ.ಮೋಹನ್, ಮೇಯರ್ ಮಂಜುನಾಥ ರೆಡ್ಡಿ, ಬಿಎಂಟಿಸಿ ಅಧ್ಯಕ್ಷ ಹೆಚ್.ನಾಭಿರಾಜ ಜೈನ್, ವ್ಯವಸ್ಥಾಪಕ ನಿರ್ದೇಶಕ ಡಾ.ಏಕ್ರೂಪ್ ಕೌರ್ ಮತ್ತಿತರರು ಭಾಗವಹಿಸಲಿದ್ದಾರೆ.
Next Story