ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
ಬೆಂಗಳೂರು, ಆ.5: ಹಿಂದಿನಿಂದ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದು ಬೈಕ್ನಲ್ಲಿ ಹೋಗುತ್ತಿದ್ದ ಇಬ್ಬರು ಸ್ನೇಹಿತರಲ್ಲಿ ಓರ್ವ ಮೃತಪಟ್ಟರೆ ಮತ್ತೊಬ್ಬ ಗಾಯಗೊಂಡ ದುರ್ಘಟನೆ ಬಳ್ಳಾರಿ ರಸ್ತೆಯ ಬ್ಯಾಟರಾಯನಪುರದ ಸಿಗ್ನಲ್ ಬಳಿ ನಿನ್ನೆ ಮಧ್ಯೆ ರಾತ್ರಿ ನಡೆದಿದೆ.
ಜಕ್ಕೂರಿನ ಮಧುಸೂದನ್(35) ಮೃತಪಟ್ಟವರು. ಗಾಯಗೊಂಡಿರುವ ಅವರ ಸ್ನೇಹಿತ ಕುಮಾರ್(34) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಚಾಲಕರಾಗಿದ್ದ ಮಧುಸೂದನ್ ಹಾಗೂ ಕುಮಾರ್ ಇಬ್ಬರು ರಾತ್ರಿ ವೇಳೆ ಕೆಲಸ ಮುಗಿಸಿಕೊಂಡು ಹೆಬ್ಬಾಳದ ಕಡೆಯಿಂದ ಜಕ್ಕೂರಿನ ಮನೆಗೆ ಬೈಕ್ನಲ್ಲಿ ಹೋಗುತ್ತಿದ್ದರು. ಮಾರ್ಗ ಮಧ್ಯೆ ಬ್ಯಾಟರಾಯನಪುರ ಸಿಗ್ನಲ್ ಬಳಿ ಹಿಂದಿನಿಂದ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿ ರಭಸಕ್ಕೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಧುಸೂದನ್ ಅನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದ್ದೊಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಹಿಂದೆ ಕುಳಿತಿದ್ದ ಕುಮಾರ್ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹೆಬ್ಬಾಳ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತವೆಸಗಿ ಪರಾರಿಯಾಗಿರುವ ಕಾರು ಚಾಲಕನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.