ಹೇಮಂತ್ ನಿಂಬಾಳ್ಕರ್ ವಿರುದ್ಧ ತನಿಖೆಗೆ ಕೋರಿ ಅರ್ಜಿ: ಎಸ್ಐಟಿಗೆ ಮನವಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ
ಬೆಂಗಳೂರು, ಆ.13: ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ವಿದೇಶಕ್ಕೆ ಹೋಗಿ ತಲೆಮರೆಸಿಕೊಳ್ಳಲು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಕಾರಣವೆಂದು ಸಲ್ಲಿಸಿದ್ದ ಪಿಐಎಲ್ ಅರ್ಜಿ ಸಂಬಂಧ ಹೈಕೋರ್ಟ್ ಅರ್ಜಿದಾರರಿಗೆ ಎಸ್ಐಟಿ ಬಳಿಯೆ ಮನವಿ ಸಲ್ಲಿಸಲು ನಿರ್ದೇಶಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ಈ ಕುರಿತು ಎಸ್ಐಟಿ ತಂಡ ನಿಂಬಾಳ್ಕರ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಜನಾಧಿಕಾರ ಸಂಘರ್ಷ ಪರಿಷತ್ನ ಸಹ ಅಧ್ಯಕ್ಷ ಆದರ್ಶ್ ಆರ್. ಐಯ್ಯರ್, ವಿ.ಬಿ.ವಿಶ್ವನಾಥ್ ಹಾಗೂ ಬಿ.ಕೆ.ಪ್ರಕಾಶ್ ಬಾಬು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪಿೀಠದಲ್ಲಿ ನಡೆಯಿತು.
ಐಎಂಎ ಹಗರಣದ ಪ್ರಮುಖ ಆರೋಪಿಯಾಗಿರುವ ಮನ್ಸೂರ್ ಖಾನ್ ಸಾರ್ವಜನಿಕರಿಗೆ ಸಾವಿರಾರು ಕೋಟಿ ವಂಚಿಸಿ, ದೇಶ ಬಿಟ್ಟು ಹೋಗಲು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಕಾನೂನು ಸುವ್ಯವಸ್ಥೆಯನ್ನು ಗಾಳಿಗೆ ತೂರಿ ಸಹಾಯ ಮಾಡಿದ್ದಾರೆ. ನಿಂಬಾಳ್ಕರ್ ವಿರುದ್ಧದ ಆರೋಪ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆದರೆ ಸಾರ್ವಜನಿಕರ ಸಾವಿರಾರು ಕೋಟಿ ಹಣ ವಾಪಸ್ ಸಿಗಲಿದೆ. ಹೀಗಾಗಿ, ಐಎಂಎ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷಾ ತನಿಖಾ ತಂಡ ನಿಂಬಾಳ್ಕರ್ ವಿರುದ್ಧ ತನಿಖೆ ನಡೆಸುವಂತೆ ನ್ಯಾಯಾಲಯ ಎಸ್ಐಟಿಗೆ ನಿರ್ದೇಶನ ನೀಡಬೇಕು ಎಂದು ಜನಾಧಿಕಾರಿ ಸಂಘರ್ಷ ಪರಿಷತ್ನ ಸಹ-ಅಧ್ಯಕ್ಷ ಆದರ್ಶ್ ಆರ್. ಐಯ್ಯ್ ಮತ್ತಿತರರು ಅರ್ಜಿ ಸಲ್ಲಿಸಿದ್ದರು.