ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಶಂಕೆ: ಬಸ್ ನಿಲ್ದಾಣಗಳಲ್ಲಿ ಬಿಗಿ ಭದ್ರತೆಗೆ ಕೆಎಸ್ಸಾರ್ಟಿಸಿ ಸೂಚನೆ
ಬೆಂಗಳೂರು, ಆ.17: ರಾಜ್ಯದ ಬಸ್ ನಿಲ್ದಾಣಗಳಲ್ಲಿ ಯಾವುದೇ ವಿಧ್ವಂಸಕ ಕೃತ್ಯಗಳು ನಡೆಯದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೆಎಸ್ಸಾರ್ಟಿಸಿ ವಿಭಾಗೀಯ ಕಚೇರಿ, ಘಟಕ, ಕಾರ್ಯಾಗಾರ, ತರಬೇತಿ ಕೇಂದ್ರ ಹಾಗೂ ಬಸ್ ನಿಲ್ದಾಣಗಳ ಪ್ರವೇಶ ದ್ವಾರದಲ್ಲಿ ಪ್ರಯಾಣಿಕರನ್ನು ಹಾಗೂ ಲಗ್ಗೇಜ್ಗಳನ್ನು ಕಡ್ಡಾಯವಾಗಿ ಮತ್ತು ಸಂಪೂರ್ಣವಾಗಿ ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ.
ಕೆಎಸ್ಸಾರ್ಟಿಯ ಪ್ರತಿಯೊಬ್ಬ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರದೇಶದ ವ್ಯಾಪ್ತಿಯಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಬಸ್ ನಿಲ್ದಾಣಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವಿನೊಂದಿಗೆ ವಿಧ್ವಂಸಕ ಕೃತ್ಯ ಪರಿಶೀಲನಾ ತಂಡದಿಂದ ಕಾಲ ಕಾಲಕ್ಕೆ ಅನಿರೀಕ್ಷಿತ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ.
ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧ ನಗರಗಳಿಗೆ ಕಾರ್ಯಾಚರಣೆಯಾಗುತ್ತಿರುವ ಫ್ಲೈ ಬಸ್ಗಳಲ್ಲಿ ಹಾಗೂ ಪ್ರತಿಷ್ಠಿತ ವೋಲ್ವೊ ಮಲ್ಟಿ ಆ್ಯಕ್ಸೆಲ್, ಅಂಬಾರಿ ಮುಂತಾದ ಬಸ್ಗಳಲ್ಲಿ ತೆಗೆದುಕೊಂಡು ಹೋಗುವಂತಹ ಲಗ್ಗೇಜುಗಳನ್ನು ಕೂಲಂಕಷ ತನಿಖೆಗೊಳಿಸಲು ಸಾರಿಗೆ ಭದ್ರತಾ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ. ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು ಹಾಗೂ ವಾಹನ ನಿಲ್ದಾಣಗಳಲ್ಲಿ ಸಾರ್ವಜನಿಕರ ಗಮನಕ್ಕೆ ಧ್ವನಿವರ್ಧಕದ ಮುಖಾಂತರ ಅರಿವು ಮೂಡಿಸುವುದು. ಸ್ಥಳೀಯ ಹಾಗೂ ಗುಪ್ತಚರ ಪೊಲೀಸರೊಂದಿಗೆ ಸತತವಾಗಿ ಸಂಪರ್ಕವನ್ನಿಟ್ಟುಕೊಳ್ಳುವುದು ಕಡ್ಡಾಯ ಮಾಡಲಾಗಿದೆ ಎಂದು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.