‘ವರ್ಗಾವಣೆ ದಂಧೆ’ ಬಗ್ಗೆ ದಾಖಲೆಗಳಿದ್ದರೆ ಬಹಿರಂಗಪಡಿಸಿ: ಕುಮಾರಸ್ವಾಮಿಗೆ ಬಿ.ವೈ.ವಿಜಯೇಂದ್ರ ಸವಾಲು
ಬೆಂಗಳೂರು, ಆ. 19: ತಾನು ‘ವರ್ಗಾವಣೆ ದಂಧೆ’ಯಲ್ಲಿ ತೊಡಗಿರುವ ಕುರಿತು ಯಾವುದಾದರೂ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಇಂದಿಲ್ಲಿ ಸವಾಲು ಹಾಕಿದ್ದಾರೆ.
ಸೋಮವಾರ ಇಲ್ಲಿನ ಡಾಲರ್ಸ್ ಕಾಲನಿಯಲ್ಲಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ವಿನಾಕಾರಣ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಆರೋಪ ಮಾಡುತ್ತಿದ್ದು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಅಲ್ಲಗಳೆದರು.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಆಡಳಿತದ ಅವಧಿಯಲ್ಲಿ ಕುಮಾರಸ್ವಾಮಿ ಮತ್ತವರ ಕುಟುಂಬದ ಸದಸ್ಯರು ಯಾವ ರೀತಿ ಕೆಲಸ ಮಾಡಿದ್ದಾರೆಂದು ಗೊತ್ತಿದೆ ಎಂದ ಟೀಕಿಸಿದ ಅವರು, ಲೋಕೋಪಯೋಗಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ವರ್ಗಾವಣೆ ಮಾಡಲಾಗಿದೆ. ಯಾರ ವಿರುದ್ಧವೂ ಆಧಾರರಹಿತ ಹೇಳಿಕೆ ನೀಡುವುದು, ಸುಳ್ಳು ಆರೋಪ ಮಾಡುವುದು ಮಾಜಿ ಸಿಎಂ ಕುಮಾರಸ್ವಾಮಿಯವರ ಘನತೆಗೆ ಸಲ್ಲ. ದಾಖಲೆಗಳಿದ್ದರೆ ಬಹಿರಂಗ ಮಾಡಬೇಕು. ಅದು ಬಿಟ್ಟು ಯಡಿಯೂರಪ್ಪ ಕುಟುಂಬದ ಆರೋಪ ಮಾಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.
‘ಕಮೀಷನ್ ದಂಧೆ, ವರ್ಗಾವಣೆ ದಂಧೆ, ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವೆಂಬುದು ಇಡೀ ರಾಜ್ಯಕ್ಕೆ ತಿಳಿದಿದೆ ಕುಮಾರಸ್ವಾಮಿಯವರೇ, ಕೋತಿ ತಾನು ತಿಂದು ಮೇಕೆ ಬಾಯಿಗೆ ವರೆಸಿದಂತಿದೆ ನಿಮ್ಮ ಮಾತುಗಳು. ಸಿಬಿಐ ತನಿಖೆಗೆ ಹೆದರಿ ಹತಾಶ ಹೇಳಿಕೆ ನೀಡುತ್ತಿದ್ದೀರಿ ವಿಷಯಾಂತರಗೊಳಿಸಿ ಜನತೆಯ ದಿಕ್ಕು ತಪ್ಪಿಸುವ ಕುತಂತ್ರದ ಮಾತು ನಿಲ್ಲಿಸಿ’
-ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಪುತ್ರ(ಟ್ವೀಟ್)