'ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ' ಎಂದು ನಾನು ಹೇಳಿಲ್ಲ: ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್
ಬೆಂಗಳೂರು, ಸೆ.24: ವಿಧಾನಸಭಾ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸೇರಿದಂತೆ ಯಾರು ಬೇಕಾದರು ನಾಮಪತ್ರ ಸಲ್ಲಿಸಬಹುದು. ಆದರೆ, ಅದು ಅಂಗೀಕಾರವಾಗಬೇಕೆ, ಬೇಡವೇ ಎಂಬುದನ್ನು ಚುನಾವಣಾಧಿಕಾರಿಗಳು ಕಾನೂನಿನಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯಚುನಾವಣಾಧಿಕಾರಿ ಸಂಜೀವ್ಕುಮಾರ್ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ಕೆಲವರು ತಮಗೆ ತಿಳಿದಂತೆ ಅರ್ಥೈಸಿಕೊಂಡಿದ್ದಾರೆ. ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ. ಈ ಬಗ್ಗೆ ಮಾತನಾಡಿದರೆ ನ್ಯಾಯಾಂಗ ನಿಂದನೆಯಾಗುತ್ತದೆ. ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವುದೇ ಚರ್ಚೆ ಮಾಡುವುದಿಲ್ಲವೆಂದರು.
ಅನರ್ಹ ಶಾಸಕರಿಗೆ ಸಂಬಂಧಿಸಿದಂತೆ ಶೀಘ್ರವೇ ತೀರ್ಪು ಹೊರಬೀಳಬಹುದು. ಅನಂತರ ಎಲ್ಲದಕ್ಕೂ ಸ್ಪಷ್ಟತೆ ಸಿಗಲಿದೆ. ಅಲ್ಲಿಯವರೆಗೂ ಈ ಬಗ್ಗೆ ಹೆಚ್ಚು ಚರ್ಚೆ ಮಾಡುವುದು ಸರಿಯಲ್ಲ. ಸ್ಪೀಕರ್ ತೀರ್ಪು ಜನಪ್ರತಿನಿಧಿ ಕಾಯ್ದೆಯನ್ನು ಅನುಸರಿಸಿದೆ. ಹೀಗಾಗಿ ನಾಮಪತ್ರ ಪರಿಶೀಲನೆ ವೇಳೆ ಚುನಾವಣಾಧಿಕಾರಿಗಳು ಎಲ್ಲ ಅಂಶಗಳನ್ನು ಗಮನಿಸುತ್ತಾರೆ ಎಂದು ಅವರು ಹೇಳಿದರು.