ಬೆಂವಿವಿ ಕುಲಪತಿ ನೇಮಕಾತಿ ರದ್ದು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಬೆಂಗಳೂರು, ಸೆ.25: ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಕೆ.ಆರ್.ವೇಣುಗೋಪಾಲ್ ನೇಮಕಾತಿಯನ್ನು ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ಮಂಗಳವಾರವಷ್ಟೇ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಅ.18ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಕೆ.ಆರ್.ವೇಣುಗೋಪಾಲ್, ಬೆಂವಿವಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಬೆಂವಿವಿ ಕುಲಪತಿ ಕೆ.ಆರ್.ವೇಣುಗೋಪಾಲ್ ಅವರ ನೇಮಕಾತಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಆದೇಶಕ್ಕೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಿಭಾಗೀಯ ನ್ಯಾಯಪೀಠವು ನೇಮಕಾತಿ ರದ್ದು ಆದೇಶಕ್ಕೆ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ಅ.16ಕ್ಕೆ ಮುಂದೂಡಿತು.
ಧಾರವಾಡದ ಡಾ.ಸಂಗಮೇಶ್ ಪಾಟೀಲ್ ಎಂಬುವವರು ಬೆಂವಿವಿ ಕುಲಪತಿ ವೇಣುಗೋಪಾಲ್ ಅವರ ವಿರುದ್ಧ ಹಲವು ಅಕ್ರಮಗಳ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಇವರ ನೇಮಕಾತಿಯನ್ನು ರದ್ದುಪಡಿಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಏಕಸದಸ್ಯ ನ್ಯಾಯಪೀಠವು ಸೆ.24ರಂದು ವೇಣುಗೋಪಾಲ್ ನೇಮಕಾತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.