ಹೆದ್ದಾರಿ ಅಗಲೀಕರಣ ವಿಚಾರ ಮರಗಳ ಕಡಿತಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಬೆಂಗಳೂರು, ಅ.17: ಕರ್ನಾಟಕ ಮತ್ತು ಗೋವಾ ನಡುವೆ(ಬೆಳಗಾವಿ, ಉತ್ತರ ಕನ್ನಡ ಜಿಲ್ಲೆ) ಹೆದ್ದಾರಿ ಅಗಲೀಕರಣಕ್ಕೆ ಸಾವಿರಾರು ಮರಗಳನ್ನು ಕಡಿಯುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮರ ಕಡಿಯುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಈ ಕುರಿತು ಸುರೇಶ್ ಹೆಬ್ಳಿಕರ್, ಜೋಸೆಫ್ ಹೂವರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಅರಣ್ಯ ಕಾಯ್ದೆಯಡಿ ಅನುಮತಿ ಪಡೆಯದೇ ದಾಂಡೇಲಿ ಅಭಯಾರಣ್ಯ ಸೇರಿ ಎನ್ಎಚ್ 4ಎ ಬಳಿ 12 ಸಾವಿರಕ್ಕೂ ಹೆಚ್ಚು ಮರಗಳನ್ನು ಕಡಿದಿದ್ದಾರೆ. ಇದರಿಂದ, ಪರಿಸರಕ್ಕೆ ಸಾಕಷ್ಟು ಹಾನಿಯಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು 2019ರ ಫೆ.19ರ ನಂತರ ಮರ ಕಡಿದಿರುವ ಬಗ್ಗೆ ಮಾಹಿತಿ ನೀಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ)ಕ್ಕೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.