ಸ್ಕೂಟರ್ಗೆ ಖಾಸಗಿ ಬಸ್ ಢಿಕ್ಕಿ: ಮೂವರು ಕಾರ್ಮಿಕರು ಮೃತ್ಯು
ಬೆಂಗಳೂರು, ಅ.29: ಖಾಸಗಿ ಬಸ್ವೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಅಸ್ಸಾಂ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹೊಸೂರು ಮುಖ್ಯರಸ್ತೆ ಅತ್ತಿಬೆಲೆಯ ಬಳಿ ನಡೆದಿದೆ ಎಂದು ವರದಿಯಾಗಿದೆ.
ಅತ್ತಿಬೆಲೆಯ ಕೈಗಾರಿಕಾ ಪ್ರದೇಶದ ಆಟೊ ಮೊಬೈಲ್ ಕಾರ್ಖಾನೆಯೊಂದರಲ್ಲಿ ಕಾರ್ಮಿಕರಾಗಿದ್ದ ಶಂಕರ್(26), ಜಯಪ್ರಕಾಶ್(28) ಹಾಗೂ ಅಜಯ್(30) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ.
ನಗರದಿಂದ ಚೆನ್ನೈಗೆ ರಾತ್ರಿ ವೇಳೆ ತೆರಳುತ್ತಿದ್ದ ಖಾಸಗಿ ಬಸ್, ಹೊಸೂರು ಮುಖ್ಯರಸ್ತೆ ಅತ್ತಿಬೆಲೆಯ ಗೆಸ್ಟ್ ಲೈನ್ ಹೊಟೇಲ್ ಬಳಿ ಎದುರಿನಿಂದ ಬರುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ತಾವು ಕೆಲಸ ಮಾಡುತ್ತಿದ್ದ ಕಾರ್ಖಾನೆಯ ಶೆಡ್ನಲ್ಲಿ ವಾಸಿಸುತ್ತಿದ್ದು, ರಾತ್ರಿ ಹೊರಗಡೆ ಹೋಗಿ ಶೆಡ್ಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತಕ್ಕೆ ಬಸ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಅತ್ತಿಬೆಲೆ ಠಾಣಾ ಪೊಲೀಸರು ಬಸ್ ಚಾಲಕನನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.