ಕೆ.ಆರ್.ಪುರ ಕಾಂಗ್ರೆಸ್ ಭದ್ರಕೋಟೆ: ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣಸ್ವಾಮಿ
ಬೆಂಗಳೂರು, ನ.22: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರವು ಆರಂಭದಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದೆ. ಅನರ್ಹ ಶಾಸಕ ಭೈರತಿ ಬಸವರಾಜು ಕಾಂಗ್ರೆಸ್ ಪಕ್ಷದಿಂದಲೇ ಎರಡು ಬಾರಿ ಇಲ್ಲಿ ಆಯ್ಕೆಯಾಗಿದ್ದರು ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ತಿಳಿಸಿದರು.
ಶುಕ್ರವಾರ ಕ್ಷೇತ್ರದ ದೇವಸಂದ್ರ ವಾರ್ಡ್ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಅಧಿಕಾರಕ್ಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗುವ ಮೂಲಕ, ಭೈರತಿ ಬಸವರಾಜು ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷದಲ್ಲಿ ಮತಗಟ್ಟೆ ಬಳಿ ಟೇಬಲ್ ಹಾಕಲು ಜನ ಸಿಗುವುದಿಲ್ಲ ಎಂದು ಬಿಜೆಪಿ ಮಾಜಿ ಶಾಸಕ ನಂದೀಶ್ ರೆಡ್ಡಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ನಾರಾಯಣಸ್ವಾಮಿ, ಬಹುಷಃ ಅವರ ಪರಿಸ್ಥಿತಿಯನ್ನು ಸ್ಮರಿಸಿಕೊಂಡು ಹೇಳಿರಬಹುದು ಎಂದರು.
2013 ಹಾಗೂ 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಂದೀಶ್ ರೆಡ್ಡಿ, ಕಾಂಗ್ರೆಸ್ ಅಭ್ಯರ್ಥಿ ಎದುರು ಪರಾಭವಗೊಂಡಿದ್ದರು. ಹಣ, ದುರಹಂಕಾರ ಹಾಗೂ ಗೂಂಡಾಗಿರಿಯಿಂದ ಮತದಾರರ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ. ಇನ್ನೂ 15 ದಿನಗಳಲ್ಲಿ ಈ ಕ್ಷೇತ್ರದ ಮತದಾರರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ನಾರಾಯಣಸ್ವಾಮಿ ಹೇಳಿದರು.