ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದ, ನನ್ನ ಬಳಿ ಸಾಕ್ಷಿ ಇದೆ ಎಂದ ಎಸ್.ಟಿ.ಸೋಮಶೇಖರ್
ಬೆಂಗಳೂರು, ಡಿ. 1: ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಒಳ ಒಪ್ಪಂದವಾಗಿದ್ದು, ಈ ಬಗ್ಗೆ ನನ್ನ ಬಳಿ ಸಾಕ್ಷ್ಯವಿದೆ. ಶೀಘ್ರದಲ್ಲೇ ಉಭಯ ನಾಯಕರ ಸಂಭಾಷಣೆಯನ್ನು ಬಹಿರಂಗಪಡಿಸುತ್ತೇನೆಂದು ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಹೊಸಬಾಂಬ್ ಸಿಡಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಮುಖ್ಯಮಂತ್ರಿ ಕನಸು ಬಿದ್ದಿರಬೇಕು. ಹೀಗಾಗಿ ಅವರು ಹೋದಲ್ಲಿ-ಬಂದಲ್ಲಿ ನಾನೇ ಸಿಎಂ ಎಂದು ತಿರುಗಾಡುತ್ತಿದ್ದಾರೆಂದು ಟೀಕಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರು. ಆಗಲೇ ಬಿಜೆಪಿಯನ್ನು ಮಣಿಸಲು ಸಾಧ್ಯವಾಗಲಿಲ್ಲ. ಈಗ ಕೇವಲ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಹರಕೆ ಕುರಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್-ಜೆಡಿಎಸ್ ಏನೇ ಒಪ್ಪಂದ ಮಾಡಿಕೊಂಡರು ಕ್ಷೇತ್ರದಲ್ಲಿ ನನ್ನ ಗೆಲುವು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಒಪ್ಪಂದ ಮಾಡಿಕೊಳ್ಳುವುದಿದ್ದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ ಅವರು, ಏನೇ ಮಾಡಿದರೂ ಕ್ಷೇತ್ರದ ಜನತೆ ನನ್ನನ್ನು ಕೈಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.