ಬೆಂಗಳೂರು: ಸಿಎಬಿ ವಿರೋಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಬೆಂಗಳೂರು, ಡಿ.11: ಪೌರತ್ವ (ತಿದ್ದುಪಡಿ) ಮಸೂದೆಯನ್ನು (ಸಿಎಬಿ) ವಿರೋಧಿಸಿ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ನಗರದ ಪುರಭವನ ಮುಂಭಾಗದ ಜಮಾಯಿಸಿದ ವಿವಿಧ ಸಂಘ-ಸಂಸ್ಥೆಗಳು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಮಸೂದೆ ಮೂಲಕ ದೇಶವನ್ನು ಇಬ್ಬಾಗ ಮಾಡಲು ಹೊರಟಿದೆ ಎಂದು ಆರೋಪಿಸಿದರು.
ಈ ಮಸೂದೆಯು ನಮ್ಮ ದೇಶದ ನೈತಿಕ, ಸಾಂವಿಧಾನಿಕ ಸ್ಫೂರ್ತಿ ಮತ್ತು ಜಾತ್ಯತೀತ ಪರಂಪರೆಗೆ ವಿರುದ್ಧವಾಗಿದೆ. ದೇಶದ ಪೌರತ್ವ ಪ್ರದಾನದಲ್ಲಿ ಧಾರ್ಮಿಕ ನೆಲೆಯ ತಾರತಮ್ಯ ನಮ್ಮ ಸಂವಿಧಾನ ಪರಿಚ್ಛೇದ 14 ಮತ್ತು ಅಂತರ್ರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳ ಉಲ್ಲಂಘನೆಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ವಿವಾದಿತ ಮಸೂದೆಯನ್ನು ಪ್ರತಿಯೊಬ್ಬರು ವಿರೋಧಿಸುವ ಮೂಲಕ ಕೋಮುಸೌಹಾರ್ದ ವಾತಾವರಣ, ವಿಶ್ವಾಸ, ನ್ಯಾಯ ಮತ್ತು ಕಾನೂನಿನ ಆಡಳಿತವನ್ನು ಪ್ರೋತ್ಸಾಹಿಸಲು ಹಾಗೂ ಸಂವಿಧಾನಿಕ ವೌಲ್ಯಗಳನ್ನು ಕಾಪಾಡಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಹೇಳಿದರು.