ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಚಿಂತನೆ: ಆರ್.ಅಶೋಕ್
ಬೆಂಗಳೂರು, ಡಿ.17: ಬೆಂಗಳೂರನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿರುವ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸಿ, ಮಹರ್ಷಿ ವಾಲ್ಮೀಕಿ ಕುಟೀರವೆಂದು ಪುನರ್ ನಾಮಕಾರಣ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಹೆಸರು ಒಂದು ಪಕ್ಷಕ್ಕೆ ಸೀಮಿತವಾಗಿದೆ. ಹೀಗಾಗಿ ಪಕ್ಷಾತೀತವಾಗಿ ಹೆಸರನ್ನು ನಾಮಕರಣ ಮಾಡುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಶಾಸಕ ರಾಜೂಗೌಡ ಇಂದಿರಾ ಕ್ಯಾಂಟೀನ್ ಬದಲಿಗೆ ಮಹರ್ಷಿ ವಾಲ್ಮೀಕಿ ಕುಟೀರವೆಂದು ನಾಮಕರಣ ಮಾಡಬೇಕೆಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇಂದಿರಾ ಕ್ಯಾಂಟೀನ್ ಬಗ್ಗೆ ರಾಜ್ಯದ ವಿವಿಧ ಭಾಗಗಳಿಂದ ದೂರುಗಳು ಬರುತ್ತಿವೆ. ಅಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದರ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗುತ್ತಿವೆ. ಹಾಗೂ ಆಹಾರವು ಕಳಪೆಯಾಗಿದೆಯೆಂದು ಆರೋಪಿಸಲಾಗುತ್ತಿದೆ. ಇವೆಲ್ಲವನ್ನು ಸರಿಪಡಿಸಲು ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.