ಎಸ್ಡಿಪಿಐ-ಪಿಎಫ್ಐ ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ದಾಖಲೆಗಳಿವೆ: ಈಶ್ವರಪ್ಪ
ಬೆಂಗಳೂರು, ಜ.18: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ದಾಖಲೆಗಳು ಸಿಕ್ಕಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಶನಿವಾರ ನಗರದ ಕೆ.ಜಿ.ರಸ್ತೆಯಲ್ಲಿರುವ ರಾಜ್ಯ ಪಂಚಾಯತ್ ರಿಸೋರ್ಸ್ ಸೆಂಟರ್ನಲ್ಲಿ ಉಪಗ್ರಹ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಸಂಘಟನೆಗಳಿಗೆ ದೇಶಕ್ಕೆ ಅನುಕೂಲ ಮಾಡುವ ಚಟುವಟಿಕೆಗಳನ್ನು ನಡೆಸಲು ಅವಕಾಶವಿದೆ. ಆದರೆ, ದೇಶಕ್ಕೆ ಅನಾನುಕೂಲವಾಗುವ ಚಟುವಟಿಕೆಗಳನ್ನು ನಡೆಸಲು ಯಾವುದೇ ಕಾರಣಕ್ಕೂ ಅವಕಾಶವಿಲ್ಲ ಎಂದು ಅವರು ಹೇಳಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ಸಂಘ ಸಂಸ್ಥೆಗಳಿಗೆ ಸ್ವಾತಂತ್ರ ಕೊಟ್ಟಿರುವುದು ದೇಶಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಏನು ಬೇಕಾದರೂ ಮಾತನಾಡಬಹುದು. ಒಂದು ಸಂಸ್ಥೆ ತಪ್ಪು ಮಾಡಿದರೆ ಅದನ್ನು ಪ್ರಶ್ನಿಸುವ ಹಕ್ಕನ್ನು ಸಂವಿಧಾನ ನೀಡಿದೆ ಎಂದು ಈಶ್ವರಪ್ಪ ಹೇಳಿದರು.
ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಮೋದನೆ ಪಡೆದುಕೊಂಡಿದೆ. ಅದಕ್ಕೆ ಸಂಬಂಧಿಸಿದಂತೆ ಪರ ಹಾಗೂ ವಿರುದ್ಧವಾಗಿ ಚರ್ಚೆಗಳು ನಡೆಯುತ್ತಿರುವುದು ಸ್ವಾಗತಾರ್ಹ ಎಂದು ಅವರು ತಿಳಿಸಿದರು. ಆದರೆ, ಕಾನೂನು ಕೈಗೆ ತೆಗೆದುಕೊಂಡು, ನಾವು ಹೇಳಿದ ರೀತಿಯಲ್ಲೆ ದೇಶದಲ್ಲಿ ಆಗಬೇಕು ಎಂದು ಪಿಎಫ್ಐ, ಎಸ್ಡಿಪಿಐ ಮಾಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಮೆಚ್ಚುವುದಿಲ್ಲ ಎಂದು ಈಶ್ವರಪ್ಪ ಹೇಳಿದರು.