ಅಪ್ರಾಪ್ತ ಬಾಲಕನ ಅಪಹರಣ ಪ್ರಕರಣ: ಆರೋಪಿ ಸೆರೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜ.29: ಅಪ್ರಾಪ್ತ ಬಾಲಕನನ್ನು ಅಪಹರಿಸಿದ್ದ ಪ್ರಕರಣ ಸಂಬಂಧ ಯುವಕನೋರ್ವನನ್ನು ಇಲ್ಲಿನ ಕಾಟನ್ಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯ ಚಿರಾಗ್ ಆರ್.ಮೆಹ್ತಾ (21) ಬಂಧಿತ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಖಾಸಗಿ ಶಾಲೆಯಿಂದ ಮನೆಗೆ ಬಂದಿದ್ದ 4ನೆ ತರಗತಿಯ ಬಾಲಕನನ್ನು ಅಪಹರಿಸಿಕೊಂಡು ಬಾಡಿಗೆಗೆ ಪಡೆದ ಸ್ಕೂಟರ್ನಲ್ಲಿ ಪರಾರಿಯಾಗಿದ್ದ. ಬಾಲಕ ನಾಪತ್ತೆಯಾಗಿದ್ದರಿಂದ ಆತಂಕಗೊಂಡ ಅವರ ತಂದೆ ವೀರಾಲಾಲ್, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಆರೋಪಿಯನ್ನು ಕೇವಲ 1 ಗಂಟೆಯೊಳಗೆ ಬಂಧಿಸಿ ಬಾಲಕನನ್ನು ರಕ್ಷಿಸಿದ್ದಾರೆ. ಬಾಲಕನ ತಂದೆ ವೀರಾ ಲಾಲ್, ಕಾಟನ್ಪೇಟೆ ಮುಖ್ಯ ರಸ್ತೆಯಲ್ಲಿ ವಾಸಿಸುತ್ತಿದ್ದು, ಚಿಕ್ಕಪೇಟೆಯಲ್ಲಿ ಎಲೆಕ್ಟ್ರಿಕ್ ಅಂಗಡಿ ಇಟ್ಟುಕೊಂಡಿದ್ದರು. ಅವರ ಬಳಿ ಹೆಚ್ಚಿನ ಹಣವಿರುವುದನ್ನು ಗಮನಿಸಿ ಆರೋಪಿಯು ಅಪಹರಣ ಮಾಡಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
Next Story