ಮೆಟ್ರೊ ಯೋಜನೆಯಲ್ಲಿ ಷರತ್ತು ಉಲ್ಲಂಘನೆ: ಕೇಂದ್ರ, ರಾಜ್ಯ ಸರಕಾರಕ್ಕೆ ವಿವರಣೆ ನೀಡಲು ಹೈಕೋರ್ಟ್ ಸೂಚನೆ
ಬೆಂಗಳೂರು, ಫೆ.13: ಎರಡನೆ ಹಂತದ ಬೆಂಗಳೂರು ಮೆಟ್ರೊ ಯೋಜನೆಗೆ ಅನುಮತಿ ನೀಡುವಾಗ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ವಿವರಣೆ ನೀಡಲು ಸೂಚಿಸಿದೆ.
ಈ ಕುರಿತು ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಎರಡನೆ ಹಂತದ ಬೆಂಗಳೂರು ಮೆಟ್ರೊ ಯೋಜನೆಗೆ ಅನುಮತಿ ನೀಡಿದ್ದಾಗ ವಿಧಿಸಿದ್ದ ಷರತ್ತುಗಳನ್ನು ಬಿಎಂಆರ್ಸಿಎಲ್ ಹಾಗೂ ರಾಜ್ಯ ಸರಕಾರ ಉಲ್ಲಂಘಿಸಿದೆ. ಹೀಗಾಗಿ, ಕಾಮಗಾರಿಗೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಮೆಟ್ರೊ ಯೋಜನೆ ಕಾಮಗಾರಿಗೆ ತಡೆ ನೀಡಲು ಬರುವುದಿಲ್ಲ. ನೀವು ಮೊದಲು ಹಣವನ್ನು ಡೆಪಾಜಿಟ್ ಮಾಡುತ್ತೀರಾ ಎಂದು ಅರ್ಜಿದಾರರನ್ನು ಪ್ರಶ್ನಿಸಿತು. ಯೋಜನೆಗೆ ಅನುಮತಿ ನೀಡುವಾಗ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿದ್ದರೆ ಕಾಮಗಾರಿಗೆ ತಡೆ ನೀಡುವ ಎಚ್ಚರಿಕೆಯನ್ನೂ ನೀಡಿ ವಿಚಾರಣೆಯನ್ನು ಮುಂದೂಡಿತು.