ಆದಿವಾಸಿಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ: ಸಿಎಂ ಭರವಸೆ
ಬೆಂಗಳೂರು, ಫೆ. 13: ಪರಿಶಿಷ್ಟರ ಕಲ್ಯಾಣಕ್ಕಾಗಿ ಎಸ್ಸಿಪಿ-ಟಿಎಸ್ಪಿ ಅಡಿ ಮೀಸಲಿಟ್ಟ ಅನುದಾನ ಸದ್ಬಳಕೆಗೆ ಅನುಕೂಲ ಆಗುವಂತೆ ಕ್ರಮ, ಸಂವಿಧಾನ ಸೌಧ ಸ್ಥಾಪನೆ ಹಾಗೂ ರಾಜ್ಯದಲ್ಲಿ ಆದಿವಾಸಿಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ಬಜೆಟ್ನಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ದಲಿತ ಸಂಘಟನೆಗಳ ಮುಖಂಡರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಡಾ.ಬಿ. ಆರ್.ಅಂಬೇಡ್ಕರ್ ಅವರ ಹೆಸರನ್ನು ಶಾಶ್ವತವಾಗಿ ಉಳಿಸಲು ಸಂವಿಧಾನ ಸೌಧ ಸ್ಥಾಪಿಸುವ ಸಂಬಂಧ ರೂಪುರೇಷೆಗಳನ್ನು ಬಜೆಟ್ನಲ್ಲಿ ಘೋಷಿಸಲಾಗುವುದು ಎಂದರು.
ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಸರಕಾರಿ ಕಾಮಗಾರಿಗಳಲ್ಲಿ ಕಲ್ಪಿಸಿರುವ ಮೀಸಲಾತಿ ಮಿತಿಯನ್ನು 50 ಲಕ್ಷ ರೂ.ನಿಂದ 1 ಕೋಟಿ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದ ಅವರು, ಪರಿಶಿಷ್ಟರ ಅಭಿವೃದ್ಧಿಗೆ ಎಸ್ಸಿಪಿ-ಟಿಎಸ್ಪಿ ಅಡಿ ಮೀಸಲಿಟ್ಟ ಅನುದಾನವನ್ನು ಅನ್ಯಕಾರ್ಯಕ್ಕೆ ಬಳಕೆ ಮಾಡುವುದಿಲ್ಲ ಎಂದು ವಾಗ್ದಾನ ನೀಡಿದರು.
ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ, ದಲಿತ ಮುಖಂಡರಾದ ಮಾವಳ್ಳಿ ಶಂಕರ್, ಶ್ರೀಧರ ಕಲಿವೀರ್, ವಿ.ನಾಗರಾಜ್, ಕೇಶವಮೂರ್ತಿ, ಎನ್. ಮೂರ್ತಿ, ವೆಂಕಟಸ್ವಾಮಿ, ಮಾರಸಂದ್ರ ಮುನಿಯಪ್ಪ, ಸಲಹೆಗಾರ ವೆಂಕಟಯ್ಯ, ಸಿಎಂ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ ಸೇರಿದಂತೆ ಇನ್ನಿತರರು ಹಾಜರಿದ್ದರು.