ಪಾಕ್ ಪರ ಘೋಷಣೆ ಆರೋಪ: ವಿದ್ಯಾರ್ಥಿಗಳ ಪರ ವಕಾಲತ್ತು ಮಾಡುವ ವಕೀಲರಿಗೆ ಭದ್ರತೆ ಒದಗಿಸಲು ಹೈಕೋರ್ಟ್ ಆದೇಶ
ಬೆಂಗಳೂರು, ಫೆ.20: ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ ಆರೋಪದಲ್ಲಿ ಬಂಧಿತರಾಗಿರುವ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳ ಪರ ಯಾವುದೇ ವಕೀಲರು ವಕಾಲತ್ತು ಹಾಕದಂತೆ ಹುಬ್ಬಳ್ಳಿ ವಕೀಲರ ಸಂಘ ಕೈಗೊಂಡಿರುವ ನಿರ್ಣಯ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ವಿದ್ಯಾರ್ಥಿಗಳ ಪರ ವಾದಿಸುವ ವಕೀಲರಿಗೆ ಭದ್ರತೆ ಒದಗಿಸಬೇಕು. ಹುಬ್ಬಳ್ಳಿ ವಕೀಲರ ಸಂಘ ಕೈಗೊಂಡಿರುವ ನಿರ್ಣಯವನ್ನು ಪುನರ್ ಪರಿಸಲಿಸಬೇಕೆಂದು ಆದೇಶಿಸಿ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ವಕೀಲ ಬಿ.ಟಿ.ವೆಂಕಟೇಶ್ ಸೇರಿ 24 ವಕೀಲರು ಸಲ್ಲಿಸಿದ್ದ ಸಾರ್ವಜನಿಕರ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಹುಬ್ಬಳ್ಳಿ ವಕೀಲರ ಸಂಘದ ನಿರ್ಣಯ ಸಂವಿಧಾನದ ವಿಧಿ 21 ಮತ್ತು 22ರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದ್ದು, ಅದನ್ನು ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಪೀಠವ ರಾಜ್ಯ ಸರಕಾರ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಹುಬ್ಬಳ್ಳಿ ಪೊಲೀಸ್ ಕಮಿಷನರ್, ಹುಬ್ಬಳ್ಳಿ ವಕೀಲರ ಸಂಘ ಹಾಗೂ ರಾಜ್ಯ ವಕೀಲರ ಪರಿಷತ್ತ್ ಗೆ ನೋಟಿಸ್ ಜಾರಿಗೊಳಿಸಿದೆ.
ಅರ್ಜಿಯಲ್ಲಿ, ವಕೀಲರ ಸಂಘ ಆರೋಪಿಗಳಿಗೆ ವಕಾಲತ್ತು ವಹಿಸದಂತೆ ಮಾಡಿರುವ ನಿರ್ಣಯ ರದ್ದುಪಡಿಸುವಂತೆ ರಾಜ್ಯ ವಕೀಲರ ಪರಿಷತ್ತಿಗೆ ನಿರ್ದೇಶಿಸಬೇಕು. ಆರೋಪಿಗಳನ್ನು ಪ್ರತಿನಿಧಿಸಲು ಮುಂದಾಗುವ ವಕೀಲರಿಗೆ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸರಿಗೆ ನಿರ್ದೇಶಿಸಬೇಕು. ಇನ್ನು ಆರೋಪಿತ ವಿದ್ಯಾರ್ಥಿಗಳನ್ನು ಬಂಧಿಸಿ ಸ್ಥಳೀಯ ಕೋರ್ಟ್ಗೆ ಹಾಜರುಪಡಿಸಿದ ವೇಳೆ ಕೆಲ ವ್ಯಕ್ತಿಗಳು ದಾಳಿ ಮಾಡಿ ಹಲ್ಲೆ ನಡೆಸುವ ಪ್ರಯತ್ನ ಮಾಡಿದ್ದಾರೆ. ಈ ಘಟನೆ ಕುರಿತಂತೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ಹಾಗೆಯೇ ಆರೋಪಿಗಳ ಮೇಲಿನ ಹಲ್ಲೆ ಬಗ್ಗೆ ಎಫ್ಐಆರ್ ದಾಖಲಿಸಲು ಕೂಡಲೇ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದರು.