ಜೋಪಡಿಗಳ ನೆಲಸಮ ವಿಚಾರ: ಮಾಹಿತಿ ನೀಡಲು ಬಿಬಿಎಂಪಿಗೆ ಸಮಯಾವಕಾಶ ನೀಡಿದ ಹೈಕೋರ್ಟ್
ಬೆಂಗಳೂರು, ಫೆ.26: ಬಾಂಗ್ಲಾದೇಶದ ಪ್ರಜೆಗಳು ನೆಲೆಸಿದ್ದಾರೆ ಎಂಬ ಆರೋಪದಡಿ ಬಿಬಿಎಂಪಿ ವಾರ್ಡ್ 151ರಲ್ಲಿದ್ದ ಜೋಪಡಿಗಳನ್ನು ಬಲವಂತವಾಗಿ ತೆರವುಗೊಳಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸೂರು ಕಳೆದುಕೊಂಡವರಿಗೆ ಪರಿಹಾರ ನೀಡುವ ಬಗ್ಗೆ ಮಾಹಿತಿ ನೀಡಲು ಒಂದು ವಾರ ಸಮಯಾವಕಾಶ ನೀಡಬೇಕೆಂದು ಹೈಕೋರ್ಟ್ಗೆ ಬಿಬಿಎಂಪಿ ಪರ ವಕೀಲರು ಮನವಿ ಮಾಡಿದ್ದರಿಂದ ಅರ್ಜಿ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿತು.
ಈ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ(ಪಿಯುಸಿಎಲ್) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಬಿಬಿಎಂಪಿ ವಾರ್ಡ್ ಸಂಖ್ಯೆ ಮಂತ್ರಿ ಇಸ್ಪಾನ್ ಅಪಾರ್ಟ್ಮೆಂಟ್ ಬಳಿಯ ಕರಿಯಮ್ಮನ ಅಗ್ರಹಾರ, ದೇವರಬೀಸನಹಳ್ಳಿ, ಬೆಳ್ಳಂದೂರು ಪ್ರದೇಶಗಳ ಜೋಪಡಿಗಳಲ್ಲಿ ವಾಸಿಸುತ್ತಿದ್ದವರು ರಾಯಚೂರು, ಹುಬ್ಬಳ್ಳಿ, ಧಾರವಾಡ ಸೇರಿ ಉತ್ತರ ಕರ್ನಾಟಕದ ಜಿಲ್ಲೆಯವರು ಹಾಗೂ ಅಸ್ಸಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಬಿಹಾರದವರು ಎಂದು ಹೇಳಲಾಗಿದೆ. ಅರ್ಜಿದಾರರ ಪರವಾಗಿ ವಕೀಲೆ ಮೈತ್ರಿಯಾ ಕೃಷ್ಣನ್ ಅವರು ವಾದಿಸಿದರು.