ಆಕ್ಷೇಪಾರ್ಹ ಭಿತ್ತಿಪತ್ರ ಪ್ರದರ್ಶನ: ಆರೋಪಿ ಆರ್ದ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು, ಫೆ.28: ಆಕ್ಷೇಪಾರ್ಹ ಫ್ರೀ ಕಾಶ್ಮೀರ ಭಿತ್ತಿಪತ್ರ ಪ್ರದರ್ಶಿಸಿದ ಸಂಬಂಧ ಆರೋಪಿ ಆರ್ದ್ರಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಾ.29ಕ್ಕೆ ಮುಂದೂಡಿದೆ.
ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಗರದ 6ನೆ ಎಸಿಎಂಎಂ ಕೋರ್ಟ್ನಲ್ಲಿ ನಡೆಯಿತು. ಸರಕಾರದ ಪರ ವಾದಿಸಿದ ವಕೀಲರು, ನಗರದ ಪುರಭವನದ ಮುಂದೆ ಫ್ರೀ ಕಾಶ್ಮೀರ ಭಿತ್ತಿಪತ್ರ ಪ್ರದರ್ಶಿಸಿರುವ ಆರ್ದ್ರಾ ಅವರು ಹಲವು ಬಾರಿ ಸರಕಾರದ ವಿರುದ್ಧ ಹೇಳಿಕೆಗಳನ್ನು ನೀಡಿ, ಗಲಾಟೆಗೆ ಪ್ರಚೋದಿಸಿದ್ದಾರೆ. ಹೀಗಾಗಿ, ಅವರಿಗೆ ಜಾಮೀನು ನೀಡಬಾರದು ಹಾಗೂ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ಕೆಲಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಫೆ.29ಕ್ಕೆ ಮುಂದೂಡಿದರು.
ಪ್ರಕರಣವೇನು: ಫ್ರೀ ಕಾಶ್ಮೀರ ಭಿತ್ತಿಪತ್ರ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಆರ್ದ್ರಾ ವಿರುದ್ಧ ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರ್ದ್ರಾರನ್ನು ಪರಪ್ಪನ ಅಗ್ರಹಾರದ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.