ಅಧಿವೇಶನಕ್ಕೆ ಪ್ರವೇಶ ನಿಷೇಧಿಸಬೇಕು: ಬಸನಗೌಡ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ
ಬೆಂಗಳೂರು, ಫೆ 29: ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಕಾಂಗ್ರೆಸ್ ಪಕ್ಷದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ವೌರ್ಯ ವೃತ್ತದ ಬಳಿ ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಸನಗೌಡ ಯತ್ನಾಳ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಅವಹೇಳನಕಾರಿ ಹಾಗೂ ಆಧಾರ ರಹಿತ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಕಾಂಗ್ರೆಸ್ ಇಂದು ನಗರದಲ್ಲಿ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಪಕ್ಷದ ಮುಖಂಡ ಎಸ್. ಮನೋಹರ್ ಮಾತನಾಡಿ, ಶಾಸಕ ಯತ್ನಾಳ್ ಅವರನ್ನು ಹುಚ್ಚಾಸ್ಪತ್ರೆಗೆ ದಾಖಲಿಸಬೇಕಿದೆ. ನಾಲಿಗೆ ಹಿಡಿತವಿಲ್ಲದೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ಹಿರಿಯರನ್ನು ಗೌರವಿಸುವ ಬದಲಿಗೆ, ಪಾಕಿಸ್ತಾನದ ಏಜೆಂಟ್ ಎಂದು ಕರೆದಿರುವುದು ಖಂಡನಾರ್ಹ ಎಂದು ಹೇಳಿದರು.
ಹಿರಿಯರನ್ನು ಟೀಕಿಸಿ ಪ್ರಚಾರ ಬಯಸುವ ಬಿಜೆಪಿ ಶಾಸಕ ಯತ್ನಾಳ್ರಿಂದ ಬಿಜೆಪಿ ಪಕ್ಷಕ್ಕೆ ಅವಮಾನವೇ ಹೊರತು, ಇತರರಿಗೆ ಅಲ್ಲ ಎಂದು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು. ದೊರೆಸ್ವಾಮಿ ಅವರು ಪಕ್ಷಾತೀತ ವ್ಯಕ್ತಿ. ಅವರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ ಎನ್ನುವುದನ್ನು ಬಿಜೆಪಿ ಮನಗಾಣಬೇಕಾಗಿದೆ ಎಂದು ತಿಳಿಸಿದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಯತ್ನಾಳ್ ಅವರನ್ನು ವಿಧಾನಸಭಾ ಅಧಿವೇಶನಕ್ಕೆ ಪ್ರವೇಶಿಸದಂತೆ ತಡೆಯಬೇಕು. ವಿಧಾನಸಭೆಯಿಂದ ಅವರನ್ನು ಅಮಾನತುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷರುಗಳಾದ ಜಿ.ಜನಾರ್ಧನ್, ಎ.ಆನಂದ್, ಯುವ ಕಾಂಗ್ರೆಸ್ ಮುಖಂಡರಾದ ಇ.ಶೇಖರ್, ಶ್ರೀಧರ್, ಉಮೇಶ್, ಪುಟ್ಟರಾಜು, ದೀಪಕ್, ಆಶಾ ರಾಜು ಸೇರಿದಂತೆ ನೂರಾರು ಕಾರ್ಯಕರ್ತರಿದ್ದರು.