ಎಸೆಸೆಲ್ಸಿ ಪರೀಕ್ಷೆ ಮುಂದೂಡಿಕೆ: ಮುಖ್ಯಮಂತ್ರಿ
ಬೆಂಗಳೂರು, ಮಾ.22: ಕೊರೋನ ವೈರಸ್ ಸೋಂಕು ಭೀತಿಯ ಹಿನ್ನೆಲೆಯಲ್ಲಿ ಮಾ.27ರಿಂದ ಆರಂಭವಾಗಬೇಕಿದ್ದ ಎಸೆಸೆಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇದರ ಜತೆಗೆ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಜೊತೆ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲ ಚುನಾವಣೆಗಳನ್ನು ಮುಂದೂಡಲು ತೀರ್ಮಾನ ಮಾಡಲಾಗಿದೆ ಎಂದವರು ಹೇಳಿದರು.
ಕೊರೋನ ತಡೆಯುವ ನಿಟ್ಟಿನಲ್ಲಿ ರಾಜ್ಯದ ಜನತೆ ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ನಗರದ ಜನತೆ ಹಳ್ಳಿಗಳಿಗೆ ಹೋಗದಂತೆ ಮನವಿ ಮಾಡಿದ ಸಿಎಂ, ಕೊರೋನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1,700 ಹಾಸಿಗೆಯ ವಿಶೇಷ ಸಮುಚ್ಚಯವನ್ನು ಮೀಸಲಿಡಲಾಗಿದೆ. ಅಲ್ಲಿರುವ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದರು.
ರಾಜ್ಯದ ಗಡಿಭಾಗವನ್ನು ಸಂಪೂರ್ಣ ಮುಚ್ಚಲಾಗಿದೆ. ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಮಾಡಲಾಗಿದೆ. ಬಾಲಬ್ರೂಯಿ ಅತಿಥಿ ಗೃಹವನ್ನು ಕೊರೋನ ತಡೆಯ ವಾರ್ ರೂಂ ತೆರೆಯಲಾಗಿದೆ ಎಂದವರು ಮಾಹಿತಿ ನೀಡಿದರು.
ಜನತೆ ಯಾವುದೇ ರೀತಿಯಲ್ಲಿ ಗಾಬರಿಯಾಗುವ ಅಗತ್ಯವಿಲ್ಲ. ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಎರಡು ತಿಂಗಳ ಪಡಿತರವನ್ನು ಒಮ್ಮೆಲೆ ವಿತರಿಸಲಾಗುವುದು ಎಂದರು ಹೇಳಿದರು.