ಅಗತ್ಯ ವಸ್ತುಗಳ ಖರೀದಿಗೆ ಪ್ರತ್ಯೇಕ ದಿನ-ಸಮಯ ನಿಗದಿ
ಬೆಂಗಳೂರು, ಮಾ.28: ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಿದ್ದರೂ ಜನತೆ ಮಾತ್ರ ಆದೇಶ ಉಲ್ಲಂಘಿಸಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬೀಳುತ್ತಿದ್ದಾರೆ. ಹೀಗಾಗಿ ಯಶವಂತಪುರ ಎಪಿಎಂಸಿಯಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯ ವಸ್ತುಗಳ ಖರೀದಿಗೆ ಪ್ರತ್ಯೇಕ ದಿನ ಹಾಗೂ ಸಮಯವನ್ನು ನಿಗದಿಪಡಿಸಲಾಗಿದೆ.
ಈ ಕುರಿತಂತೆ ಯಶವಂತಪುರ ಎಪಿಎಂಸಿ ಕಾರ್ಯದರ್ಶಿ ಎಲ್ಲ ವರ್ತಕರಿಗೆ ಖಡಕ್ ಸೂಚನೆ ರವಾನಿಸಿದ್ದಾರೆ. ತರಕಾರಿ, ದಿನಸಿ ಮಾರಾಟಕ್ಕೆ ಪ್ರತ್ಯೇಕ ದಿನಗಳನ್ನು ಸೂಚಿಸಲಾಗಿದೆ. ಸೋಮವಾರ, ಬುಧವಾರ, ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ಶುಂಠಿ, ತೆಂಗಿನಕಾಯಿ ಸೇರಿದಂತೆ ತರಕಾರಿಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇದರೊಂದಿಗೆ ಮಂಗಳವಾರ, ಗುರುವಾರ, ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಕ್ಕಿ, ಬೇಳೆ, ಕಾಳು, ಮೆಣಸಿನಕಾಯಿ ಬೆಲ್ಲ ಸೇರಿದಂತೆ ಇತರೇ ದಿನಸಿ ಪದಾರ್ಥಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಎಪಿಎಂಸಿಗೆ ಬರುವ ಎಲ್ಲ ವರ್ತಕರು, ಸಿಬ್ಬಂದಿ, ಹಮಾಲಿಗಳಿಗೂ ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಗಳನ್ನು ಬಳಸುವಂತೆ ಸೂಚಿಸಲಾಗಿದೆ. ಅಲ್ಲದೇ, ಅಂಗಡಿಗಳಿಗೆ ಬರುವ ಗ್ರಾಹಕರೂ ಕೂಡ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಂಗಡಿಗಳ ಬಳಿ ಸರ್ಕಲ್ ಹಾಕಬೇಕು ಎಂದು ಎಪಿಎಂಸಿ ಕಾರ್ಯದರ್ಶಿ ಆದೇಶ ನೀಡಿದ್ದಾರೆ.