ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕಾರ್ಮಿಕನ ಕೊಲೆ
ಬೆಂಗಳೂರು, ಜೂ.1: ಕಾರ್ಮಿಕರನೋರ್ವನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದು ಪರಾರಿಯಾಗಿರುವ ಘಟನೆ ಇಲ್ಲಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಟ್ಟದಹಳ್ಳಿ ನಿವಾಸಿ ಶುಹೈಬ್(26) ಕೊಲೆಯಾದ ಕಾರ್ಮಿಕ ಎಂದು ಪೊಲೀಸರು ಗುರುತಿಸಿದ್ದಾರೆ.
ರವಿವಾರ ತಡ ರಾತ್ರಿ ಶುಹೈಬ್ ನನ್ನು ಇಲ್ಲಿನ ಸಾಯಿನಗರದ ಖಾಲಿ ನಿವೇಶನಕ್ಕೆ ಕರೆದೊಯ್ದ ದುಷ್ಕರ್ಮಿಗಳು ಚಾಕುವಿನಿಂದ ಹೊಟ್ಟೆ, ಎದೆ, ಮತ್ತಿತರ ಭಾಗಗಳಿಗೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳೀಯರು ಖಾಲಿ ನಿವೇಶನದಲ್ಲಿ ಶವ ಇರುವುದನ್ನು ಕಂಡು ಪೊಲೀಸರಿಗೆ ದೂರು ಮುಟ್ಟಿಸಿದರು. ಸ್ಥಳಕ್ಕೆ ಆಗಮಿಸಿದ ವಿದ್ಯಾರಣ್ಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಶುಹೈಬ್ ಕೊಲೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆಗಾರರ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ.
Next Story