ಪಾದರಾಯನಪುರ ಗಲಾಟೆ ಪ್ರಕರಣ: ಎಫ್ಐಆರ್ ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು, ಜೂ.3: ಪಾದರಾಯನಪುರದಲ್ಲಿ ಕೊರೋನ ನಿಯಂತ್ರಣ ಕರ್ತವ್ಯದಲ್ಲಿದ್ದ ವೈದ್ಯರು, ಆರೋಗ್ಯ ಕಾರ್ಯಕರ್ತರು ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ 126 ಆರೋಪಿಗಳ ವಿರುದ್ಧ ಜೆಜೆ ನಗರ ಠಾಣಾ ಪೊಲೀಸರು ದಾಖಲಿಸಿರುವ ಪ್ರತ್ಯೇಕ ನಾಲ್ಕು ಎಫ್ಐಆರ್ ಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ವಜೀರ್ ಖಾನ್ ಸೇರಿ ಪ್ರಕರಣದ 126 ಆರೋಪಿಗಳು ತಮ್ಮ ವಿರುದ್ಧ ಎಫ್ಐಆರ್ ಗಳನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ನಾಲ್ಕು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಪಿ.ಬಿ.ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಒಂದೇ ಕೃತ್ಯದ ಸಂಬಂಧ ಎರಡನೆ ಎಫ್ಐಆರ್ ದಾಖಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ, ಈ ಪ್ರಕರಣದಲ್ಲಿ ಪೊಲೀಸರು ತಮ್ಮ ವಿರುದ್ಧ ಒಂದೇ ಕೃತ್ಯಕ್ಕೆ ನಾಲ್ಕು ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ. ಹೀಗಾಗಿ, ಎಫ್ಐಆರ್ ಗಳನ್ನು ರದ್ದುಪಡಿಸಬೇಕು ಹಾಗೂ ಆ ಕುರಿತ ಕಾನೂನು ಪ್ರಕ್ರಿಯೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.
ಈ ವಾದವನ್ನು ಆಕ್ಷೇಪಿಸಿದ ರಾಜ್ಯ ಸರಕಾರಿ ಅಭಿಯೋಜಕರಾದ ವಿ.ಎಂ.ಶೀಲವಂತ್ ಅವರು, ಅರ್ಜಿದಾರರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ನಾಲ್ಕು ಸ್ಥಳ, ಬೇರೆ ಬೇರೆ ಸಮಯದಲ್ಲಿ ಸಂಭವಿಸಿದ ಘಟನೆಗಳ ಕುರಿತು ನಾಲ್ವರು ದಾಖಲಿಸಿದ ಪ್ರತ್ಯೇಕ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಹೀಗಾಗಿ, ಒಂದೇ ಕೃತ್ಯಕ್ಕೆ 2 ಎಫ್ಐಆರ್ ದಾಖಲಿಸಿಲ್ಲ ಎಂದರು.
ಈ ವಾದವನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಎಫ್ಐಆರ್ ಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿ ವಿಚಾರಣೆ ಮುಂದೂಡಿತು.