ಕೋವಿಡ್-19: ಮೃತ ಪೊಲೀಸರ ಕುಟುಂಬಗಳಿಗೆ 30 ಲಕ್ಷ ರೂ.ಪರಿಹಾರ- ಗೃಹ ಸಚಿವ ಬೊಮ್ಮಾಯಿ
ಬೆಂಗಳೂರು, ಜೂ.24: ಕೋವಿಡ್-19 ಸೋಂಕಿನಿಂದ ಮೃತಪಟ್ಟ ಪೊಲೀಸ್ ಇಲಾಖೆಯ ಸಿಬ್ಬಂದಿ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ಸೋಂಕಿನಿಂದ ಬೆಂಗಳೂರಿನಲ್ಲಿ ಓರ್ವ ಎಎಸ್ಸೈ ಸೇರಿದಂತೆ ಮೂವರು ಪೊಲೀಸರು ಮೃತಪಟ್ಟಿದ್ದಾರೆ. ಇವರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ನುಡಿದರು.
ಕೊರೋನ ಸೈನಿಕರಾದ ಪೊಲೀಸರಿಗೆ ಸೋಂಕು ತಗಲಿದರೆ ಅವರಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದ ಅವರು, ಸೋಂಕು ತಗಲಿರುವ ಪೊಲೀಸರ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ 5 ಆಸ್ಪತ್ರೆಗಳನ್ನು ಗುರುತಿಸಿದ್ದೇವೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೂ ಪೊಲೀಸರಿಗೆ ಉತ್ತಮ ಚಿಕಿತ್ಸೆ ನೀಡುವ ಸಂಬಂಧ ಚರ್ಚೆ ನಡೆಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಮತ್ತೆ ಲಾಕ್ಡೌನ್ ಮಾಡುವ ವಿಚಾರ ಸಂಬಂಧ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿದಿನ ಪರಿಸ್ಥಿತಿ ಅವಲೋಕನ ಮಾಡುತ್ತಿದ್ದಾರೆ. ಅಧಿಕಾರಿಗಳಿಂದಲೂ ಪ್ರತಿನಿತ್ಯ ವರದಿ ಪಡೆಯುತ್ತಿದ್ದು, ತಜ್ಞರ ಅಭಿಪ್ರಾಯ ಪಡೆದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.