ಬೆಂಗಳೂರು: ಕೊರೋನ ಸೋಂಕಿಗೆ ನರ್ಸ್ ಬಲಿ
ಬೆಂಗಳೂರು, ಜು.4: ನಗರದಲ್ಲಿ ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುವ ಕೊರೋನ ಯೋಧರಿಗೂ ಸೋಂಕು ಬೆಂಬಿಡದೇ ಕಾಡುತ್ತಿದ್ದು, ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲಿಂಗರಾಜಪುರ ನಿವಾಸಿಯಾಗಿರುವ ನರ್ಸ್ ಒಬ್ಬರು ಶನಿವಾರ ಮೃತಪಟ್ಟಿದ್ದಾರೆ.
ಸಂಜಯಗಾಂಧಿ ಅಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 10 ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಯ ಅಧಿಕಾರಿಗಳು ಸೋಂಕು ಇರುವುದನ್ನು ಮರೆಮಾಚಿ ಕೆಲಸಕ್ಕೆ ಬರುವಂತೆ ಸೂಚಿಸಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಇನ್ನು, ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಕೆಸಿ ಜನರಲ್ ಆಸ್ಪತ್ರೆಯ ಕೋವಿಡ್ ಐಸಿಯು ನಲ್ಲಿ ರೋಗಿಗಳ ಆರೈಕೆ ಮಾಡುತ್ತಿದ್ದ 5 ನರ್ಸ್ ಗಳಿಗೆ ಕೊರೋನ ಪಾಸಿಟಿವ್ ಬಂದಿದ್ದು, ಇವರ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್ ಮಾಡಲಾಗಿದೆ.
ಚಿಕಿತ್ಸೆ ಫಲಕಾರಿಯಾಗದೇ ಸೋಂಕಿತ ಮೃತ
ಕೊರೋನ ವೈರಸ್ ನಿಂದ ಶಂಕರಮಠ ವಾರ್ಡ್ ನ ಕುರುಬರಹಳ್ಳಿಯ 60 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.