ಡಾ.ಅಂಬೇಡ್ಕರ್ ನಿವಾಸದ ಮೇಲೆ ದಾಳಿ: ತಪ್ಪಿತಸ್ಥರ ಬಂಧನಕ್ಕೆ ದಸಂಸ ಒತ್ತಾಯ
ಬೆಂಗಳೂರು, ಜು. 8: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮುಂಬೈಯಲ್ಲಿನ ಮನೆ `ರಾಜ್ಗೃಹ' ಮೇಲಿನ ಕಿಡಿಗೇಡಿಗಳ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ದಲಿತ ಸಂಘರ್ಷ ಸಮಿತಿ, ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ, ಅವರನ್ನು ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಸಮಿತಿಯ ಬೆಂಗಳೂರು ವಿಭಾಗೀಯ ಸಂಚಾಲಯ ಮಂಜುನಾಥ ಅಣ್ಣಯ್ಯ ಆಗ್ರಹಿಸಿದ್ದಾರೆ.
ದುಷ್ಕರ್ಮಿಗಳು ಮನೆಯಲ್ಲಿನ ಸಿಸಿಟಿವಿ ಕ್ಯಾಮರ, ಕಿಟಕಿ ಗಾಜುಗಳನ್ನು ಪುಡಿಗೈದಿದ್ದು, ಹೂವಿನ ಗಿಡಗಳನ್ನು ಧ್ವಂಸ ಮಾಡಿದ್ದಾರೆ. ಈ ಘಟನೆಯನ್ನು ಮಹಾರಾಷ್ಟ್ರ ಗೃಹ ಸಚಿವ ತೀವ್ರವಾಗಿ ಖಂಡಿಸಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದೇಶಕ್ಕೆ ಸಂವಿಧಾನ ನೀಡಿದ ಡಾ. ಅಂಬೇಡ್ಕರ್ ಅವರಿಗೆ ರಕ್ಷಣೆ ಇಲ್ಲವೆಂದರೆ ದೇಶದ ಕಾನೂನು ವ್ಯವಸ್ಥೆ ಎತ್ತ ಸಾಗುತ್ತಿದೆ ಎಂಬುದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಆಲೋಚಿಸಬೇಕಾಗುತ್ತದೆ. ಹೀಗಾಗಿ ಮಹಾರಾಷ್ಟ್ರ ಸಿಎಂ ಮತ್ತು ಅಲ್ಲಿನ ಗೃಹ ಸಚಿವರು ತಕ್ಷಣವೇ ತಪ್ಪಿತಸ್ಥರ ಬಂಧನಕ್ಕೆ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.