ರಾಜಕೀಯ ವೈಷಮ್ಯಕ್ಕೆ ಶಾಸಕ ಅಖಂಡ ಶ್ರೀನಿವಾಸ್ ಗುರಿ ?
ಬೆಂಗಳೂರು, ಆ.12: ನವೀನ್ ಪ್ರಕರಣವನ್ನು ಮುಂದಿಟ್ಟುಕೊಂಡು ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ರಾಜಕೀಯ ವೈಷಮ್ಯ ಸಾಧಿಸಲಾಗಿದೆಯೆ ಎಂಬ ಅನುಮಾನಗಳು ಮೂಡಿವೆ.
ನವೀನ್, ಅಖಂಡ ಶ್ರೀನಿವಾಸಮೂರ್ತಿಯ ಸಹೋದರಿಯ ಪುತ್ರನಾಗಿದ್ದರೂ ರಾಜಕೀಯವಾಗಿ ಬೇರೆ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾಗುತ್ತಿದೆ. ಶ್ರೀನಿವಾಸಮೂರ್ತಿ ಜೆಡಿಎಸ್ ಪಕ್ಷದಲ್ಲಿದ್ದಾಗ, ನವೀನ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದ. ಕಳೆದ ವಿಧಾನಸಭಾ ಚುನಾವಣೆ ವೇಳೆ ಶ್ರೀನಿವಾಸಮೂರ್ತಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ, ನವೀನ್ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದ ಎಂದು ಹೇಳಲಾಗುತ್ತಿದೆ.
ಇದಕ್ಕೆ ಇಂಬುಕೊಡುವಂತೆ ನಿನ್ನೆ ರಾತ್ರಿ ಕಾವಲ್ಭೈರಸಂದ್ರದಲ್ಲಿ ನಡೆದಿರುವ ಗಲಭೆ ವೇಳೆ, ಶ್ರೀನಿವಾಸಮೂರ್ತಿಯ ಮನೆಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳು, ಮಾಜಿ ನಗರ ಪಾಲಿಕೆ ಸದಸ್ಯೆ ಗೌರಮ್ಮ ಮತ್ತು ಸ್ಥಳೀಯ ಬಿಜೆಪಿ ನಾಯಕರ ಮನೆಗಳನ್ನು ಗುರಿಯಾಗಿಸಿ ದಾಳಿಗಳನ್ನು ನಡೆಸಿದ್ದಾರೆ ತಿಳಿದು ಬಂದಿದೆ.
ಸ್ಥಳೀಯ ಜನಪ್ರತಿನಿಧಿಗಳ, ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಟ್ವೀಟ್ ಇದಕ್ಕೆ ಪೂರಕವಾಗಿದೆ.