ಸರಗಳ್ಳತನ ಪ್ರಕರಣ: ಆರೋಪಿಗಳಿಗೆ ಗುಂಡೇಟು
ಬೆಂಗಳೂರು, ಆ.31: ಸರಗಳ್ಳತನ ಪ್ರಕರಣ ಸಂಬಂಧ ಆರೋಪಿಗಳ ಕಾಲಿಗೆ ಪಿಸ್ತೂಲಿನಿಂದ ಗುಂಡು ಹಾರಿಸಿ ಇಲ್ಲಿನ ರಾಜಾಜಿನಗರ ಠಾಣಾ ವ್ಯಾಪ್ತಿಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸುಭಾಷ್ ಮತ್ತು ಸಂಜೀವ್ ಎಂಬುವರು ಬಂಧಿತ ಆರೋಪಿಗಳಾಗಿದ್ದು, ಗುಂಡೇಟಿನಿಂದ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿಗಳಿಬ್ಬರು ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡುತ್ತಿದ್ದರು. ಈ ಬಗ್ಗೆ ಪೊಲೀಸ್ ಕಂಟ್ರೋಲ್ ರೂಂಗೆ ಕೂಡ ಮಾಹಿತಿ ಬಂದಿತ್ತು. ಅಲ್ಲದೆ, ಸೋಮವಾರ ಮುಂಜಾನೆ ಸುಮಾರಿಗೆ ರಾಜಾಜಿನಗರದ ಹಳೇ ಪೊಲೀಸ್ ಠಾಣೆ ಸರ್ಕಲ್ ಬಳಿ ಆರೋಪಿಗಳು ಮಹಿಳೆಯೋರ್ವರ ಸರ ಕಳವು ಮಾಡಿದ್ದಾರೆ.
ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದಿದ್ದು, ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಇಲ್ಲಿನ ಇಸ್ಕಾನ್ ದೇವಾಸ್ಥಾನ ಬಳಿ ಆರೋಪಿಗಳನ್ನು ಬಂಧಿಸಲು ಮುಂದಾದಾಗ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹೆಡ್ ಕಾನ್ಸ್ಟೆಬಲ್ಗೆ ಗಾಯವಾಗಿದ್ದು, ತಕ್ಷಣ ಆತ್ಮರಕ್ಷಣೆಗೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.
ಬಳಿಕ ಗಾಯಾಳುಗಳು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.