ವಿಧಾನ ಮಂಡಲ ಅಧಿವೇಶನ: ಸರಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ವಿಪಕ್ಷ ಕಾಂಗ್ರೆಸ್ ಸಜ್ಜು
ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು, ಸೆ. 16: ರಾಜ್ಯ ಸರಕಾರ 'ಅಧ್ಯಾದೇಶ'ಗಳ ಮೂಲಕ ಜಾರಿಗೊಳಿಸಲು ಮುಂದಾಗಿರುವ ಕರ್ನಾಟಕ ಭೂ ಸುಧಾರಣೆ, ಎಪಿಎಂಸಿ, ಕೈಗಾರಿಕೆ ಸುಧಾರಣಾ, ಪಂಚಾಯತ್ ರಾಜ್' ಸೇರಿದಂತೆ ಇನ್ನಿತರ ಕಾಯ್ದೆಗಳ ತಿದ್ದುಪಡಿಯನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ವಿಧಾನ ಮಂಡಲ ಅಧಿವೇಶನದಲ್ಲಿ ಹೋರಾಟ ನಡೆಸಲು ವಿಪಕ್ಷ ನಾಯಕ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬುಧವಾರ ನಗರದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯ ಸರಕಾರದ ವಿರುದ್ಧ ವಿಧಾನ ಮಂಡಲದಲ್ಲಿ ಚರ್ಚಿಸಬೇಕಾದ ವಿಚಾರಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಲಾಯಿತು. ಮಹಾಮಾರಿ ಕೋವಿಡ್-19 ನಿಯಂತ್ರಣ, ಮಾದಕ ವಸ್ತುಗಳ(ಡ್ರಗ್ಸ್) ಹಗರಣ, ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ, ಡಿ.ಜೆ.ಹಳ್ಳಿ ಗಲಭೆ, ಹದಗೆಟ್ಟ ಕಾನೂನು ಸುವ್ಯವಸ್ಥೆ ಸಮಸ್ಯೆ ಸೇರಿದಂತೆ ಪ್ರವಾಹ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳಲ್ಲಿ ವೈಫಲ್ಯಗಳನ್ನು ಪ್ರಸ್ತಾಪಿಸಲು ನಿರ್ಧರಿಸಲಾಗಿದೆ.
`ಉಳುವವನೆ ಭೂ ಒಡೆಯ'ನನ್ನಾಗಿಸಿದ್ದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ರಾಜ್ಯ ಸರಕಾರ ಉಳ್ಳವನೆ ಭೂ ಒಡೆಯನ್ನಾಗಿ ಮಾಡಲು ಮುಂದಾಗಿದೆ. ಅದೇ ರೀತಿಯಲ್ಲಿ ಎಪಿಎಂಸಿ, ಕೈಗಾರಿಕಾ ಸುಧಾರಣೆ ನೆಪದಲ್ಲಿ ಕಾರ್ಮಿಕ ವಿರೋಧಿ ಕಾನೂನು ತಿದ್ದುಪಡಿಯಿಂದ ರಾಜ್ಯದ ಜನರ ಮೇಲಾಗುವ ದುಷ್ಪರಿಣಾಮಗಳನ್ನು ಬಿಚ್ಚಿಟ್ಟ ಸಿದ್ದರಾಮಯ್ಯ, ಕಾಯ್ದೆಗಳ ತಿದ್ದುಪಡಿಗಳ ಮೂಲಕ ಸರಕಾರ ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ರೈತರ, ಬಡವರ, ಕಾರ್ಮಿಕರನ್ನು ಅತಂತ್ರ ಸ್ಥಿತಿಗೆ ತಳ್ಳುತ್ತಿದೆ. ಕೋವಿಡ್-19 ಸಂಕಷ್ಟದಿಂದ ಜರ್ಜರಿತವಾಗಿರುವ ಜನರಿಗೆ ಕಾಯ್ದೆಗಳ ಮೂಲಕ ಮತ್ತಷ್ಟು ತೊಂದರೆ ನೀಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ವಿಧಾನ ಮಂಡಲದಲ್ಲಿ ಚರ್ಚಿಸದೆ ಅಧ್ಯಾದೇಶಗಳ ಮೂಲಕ ಕಾಯ್ದೆಗಳನ್ನು ಜಾರಿಗೊಳಿಸುವ ರಾಜ್ಯ ಸರಕಾರ ತನ್ನ ಸರ್ವಾಧಿಕಾರಿ ಧೋರಣೆಯನ್ನು ಮುಂದುವರಿಸಿದೆ. ವಿಧಾನಸಭೆಯಲ್ಲಿ ತಮಗೆ ಸಂಖ್ಯಾಬಲ ಇದೆ ಎಂಬ ಕಾರಣಕ್ಕಾಗಿ ಜನ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ನಡುವಳಿಕೆ. ಯಾವುದೇ ಕಾರಣಕ್ಕೂ ಜನರಿಗೆ ಹಾನಿ ಮಾಡುವ ಕಾಯ್ದೆಗಳು ಜಾರಿಯಾಗಲು ಬಿಡಬಾರದು ಎಂದು ಸಿದ್ದರಾಮಯ್ಯ ತಿಳಿಸಿದರು.
ದಿಕ್ಕು ತಪ್ಪಿಸುವ ಯತ್ನ: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದ ರಾಜ್ಯ ಸರಕಾರ ಇದೀಗ ಮಾದಕ ದ್ರವ್ಯಗಳ(ಡ್ರಗ್ಸ್) ವಿಚಾರದಲ್ಲಿಯೂ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದನ್ನು ಬಿಟ್ಟು ರಾಜಕೀಯ ಪ್ರೇರಿತ ಹೇಳಿಕೆಗಳ ಮೂಲಕ ರಾಜ್ಯದ ಜನರನ್ನು ಅತ್ಯಂತ ವ್ಯವಸ್ಥಿತವಾಗಿ ದಾರಿ ತಪ್ಪಿಸುವ ಕೆಲಸದಲ್ಲಿ ತೊಡಗಿದೆ. ಆ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದೆ. ಈ ಬಗ್ಗೆ ಸದನದಲ್ಲಿ ಹೋರಾಟ ನಡೆಸಬೇಕು ಎಂದು ಸಿದ್ದರಾಮಯ್ಯ, ಶಾಸಕರಿಗೆ ಸೂಚಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಎಲ್ಲ ಕ್ಷೇತ್ರಗಳಲ್ಲಿಯೂ ವೈಫಲ್ಯವಾಗಿದ್ದು, ಅಕ್ರಮಗಳಲ್ಲಿ ತೊಡಗಿದೆ. ರಾಜ್ಯ ಸಮಸ್ಯೆಗಳ ಮೇಲೆ ವಿಧಾನ ಮಂಡಲದಲ್ಲಿ ಬೆಳಕು ಚೆಲ್ಲುವ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಸರಕಾರದ ಗಮನ ಸೆಳೆಯಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಎಲ್ಲ ವಿಷಯಗಳ ಮೇಲೆ ಚರ್ಚೆ ಮಾಡಲು ಹೋಗಿ ಗೊಂದಲ ಮಾಡಿಕೊಳ್ಳದೆ, ವಿಷಯಗಳ ಬಗ್ಗೆ ಚರ್ಚೆಗೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದರು.
ಬಿಜೆಪಿ ಸದಸ್ಯರ ಪ್ರಚೋದನಾಕಾರಿ ಮಾತುಗಳ ಮೂಲಕ ವಿಷಯವನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುವುದು ಸಹಜ. ಆದರೆ, ಅದಕ್ಕೆ ತಲೆಕೆಡಿಸಿಕೊಳ್ಳದೆ ಪ್ರಮುಖ ವಿಚಾರಗಳನ್ನು ಸಮರ್ಪವಾಗಿ ಚರ್ಚಿಸಿ, ಸರಕಾರದ ಕಿವಿಹಿಂಡುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಒತ್ತಡ ಹೇರಬೇಕು. ಯಾವುದೇ ಶಾಸಕರು ಸದನಕ್ಕೆ ಅನಗತ್ಯ ಗೈರು ಹಾಜರಾಗದೆ ಪಾಲ್ಗೊಳ್ಳಬೇಕು. ಯಾವುದೇ ವಿಚಾರಗಳ ಚರ್ಚೆಯ ಬಗ್ಗೆ ವಿಪಕ್ಷದ ಮುಖ್ಯ ಸಚೇತಕ ಅಜಯ್ ಸಿಂಗ್ ಅವರಿಗೆ ಮೊದಲೇ ತಿಳಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಿರಿಯ ಮುಖಂಡರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ಶಾಸಕಾಂಗ ಪಕ್ಷದ ಕಾರ್ಯದರ್ಶಿ ಇ.ತುಕಾರಾಂ ಸೇರಿದಂತೆ ಶಾಸಕರು ಮತ್ತು ಮೇಲ್ಮನೆ ಸದಸ್ಯರು ಪಾಲ್ಗೊಂಡಿದ್ದರು.