ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ: ಗೀತಾ ಅಗ್ನಿಹೋತ್ರಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬೆಂಗಳೂರು, ಆ.30: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಹಲೆವಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆಯ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ತಿಳಿಸಿದ್ದಾರೆ.
ಮಂಗಳವಾರ ಖಾಸಗಿ ವಾಹಿನಿಯೊಂದಕ್ಕೆ ಮಾಹಿತಿ ನೀಡಿರುವ ಅವರು, ತಮಿಳುನಾಡಿನ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆ ಪ್ರಾರಂಭವಾಗಿದೆ. ಇದು ಬೆಂಗಳೂರಿಗೆ ವ್ಯಾಪಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಳೆಯಿಂದಾಗುವ ಅಪಾಯವನ್ನು ತಪ್ಪಿಸಲು ಈಗಲೆ ಅಗತ್ಯಕ್ರಮಗಳನ್ನು ಕೈಗೊಂಡರೆ ಜನತೆಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಆಶಿಸಿದ್ದಾರೆ.
ಕಳೆದ ತಿಂಗಳು ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರಗೊಂಡಿತ್ತು. ಹಲವು ಬಡಾವಣೆಗಳಿಗೆ ನೀರು ನುಗ್ಗಿ ಜನತೆ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಿದರು. ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದ್ದು, ಮತ್ತೊಮ್ಮೆ ಸಮಸ್ಯೆಗಳಾಗುವ ಸಾಧ್ಯತೆಯಿದೆ ಎಂದು ಜನತೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ತಿಂಗಳು ಸುರಿದ ಮಳೆಯಿಂದಾದ ಸಮಸ್ಯೆಗಳಿಂದ ಇನ್ನೂ ಚೇತರಿಸಿಕೊಂಡಿಲ್ಲ. ಈಗ ಮತ್ತೆ ಮೂರು ದಿನ ಮಳೆ ಎಂದರೆ ಭಯವಾಗುತ್ತಿದೆ. ಇಲ್ಲಿರುವ ರಾಜಕಾಲುವೆಗಳನ್ನು ಶುಚಿ ಮಾಡಲಾಗಿದೆ. ಆದರೂ ಮಳೆಯ ಸ್ವರೂಪ ಹೇಗಿರುತ್ತದೋ ಗೊತ್ತಿಲ್ಲ.
-ಮಂಜುಳಾ ಸಾರಕ್ಕಿ ಕೆರೆಯ ನಿವಾಸಿ, ಬೆಂಗಳೂರು