ಕೆಪಿಸಿಸಿ ಅಧ್ಯಕ್ಷ ನೇಮಕಾತಿ ಹೈಕಮಾಂಡ್ಗೆ ಬಿಟ್ಟ ವಿಚಾರ: ಖರ್ಗೆ
ಕಲಬುರ್ಗಿ, ಮೇ 6: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಅಂತಿಮ ನಿರ್ಣಯ ಹೈಕಮಾಂಡ್ಗೆ ಬಿಟ್ಟ ವಿಚಾರವಾಗಿದೆ ಎಂದು ಸಂಸದ ಮತ್ತು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಪರಿಶೀಲನೆಯನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಗಳು ತೆಗೆದುಕೊಳ್ಳುತ್ತಾರೆ. ಮುಂದಿನ ತೀರ್ಮಾನವನ್ನು ಹೈ ಕಮಾಂಡ್ ಕೈಗೊಳ್ಳಲಿದೆ ಎಂದರು.
ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ, ಇಂಧನ ಡಿ.ಕೆ. ಶಿವಕುಮಾರ, ಮಾಜಿ ಸಚಿವ ಎಸ್.ಆರ್. ಪಾಟೀಲ ಅವರು ಸೇರಿದಂತೆ ಹಲವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದು, ಹೈಕಮಾಂಡ್ ಸೂಕ್ತರನ್ನು ಆಯ್ಕ್ಕೆ ಮಾಡಲಿದೆ. 18 ವರ್ಷಗಳ ಸತತ ಪ್ರಯತ್ನದಿಂದ ನಿನ್ನೆ ದಕ್ಷಿಣ ಏಷ್ಯಾ ಸಂಪರ್ಕ ಉಪಗ್ರಹ ಜಿ ಸ್ಯಾಟ್ 9 ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ( ಇಸ್ರೊ) ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಇದು ಯಾರ ಪ್ರಯತ್ನ ಮತ್ತು ಯಾರ ಅವಧಿಯಲ್ಲಾಗಿದ್ದು ಎಂಬುದನ್ನು ಬಿಜೆಪಿಯವರು ತಿಳಿದುಕೊಳ್ಳಲಿ ಎಂದು ಅವರು ಹೇಳಿದರು.