ಹೊಟೇಲ್ ಕಾರ್ಮಿಕನ ಹತ್ಯೆ
ಬೆಂಗಳೂರು, ಜೂ.20: ಹೊರರಾಜ್ಯದಿಂದ ನಗರಕ್ಕೆ ಬಂದು ಖಾಸಗಿ ಹೊಟೇಲ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನನ್ನು ದುಷ್ಕರ್ಮಿಗಳು ಹತ್ಯೆಗೈದಿರುವ ದುರ್ಘಟನೆ ಇಲ್ಲಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ.
ಸೌರಬ್(20) ಎಂಬಾತ ಕೊಲೆಯಾದ ಕಾರ್ಮಿಕ ಎಂದು ಗುರುತಿಸಲಾಗಿದ್ದು, ಈಶಾನ್ಯ ಭಾರತದಿಂದ ಬೆಂಗಳೂರಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ತಿಂಗಳ ಹಿಂದೆಯಷ್ಟೇ ನಗರಕ್ಕೆ ಬಂದು ನೆಲೆಸಿದ್ದ ಸೌರಬ್, ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿಯಿರುವ ಇಂಪೀರಿಯಲ್ ಹೊಟೇಲ್ನಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿಯೇ ಕೆಲಸ ಮಾಡುತ್ತಿದ್ದ ಕೆಲ ಯುವಕರೊಂದಿಗೆ ಮನೆ ಮಾಡಿಕೊಂಡು ಹೊಸಗುಡ್ಡದಹಳ್ಳಿಯಲ್ಲಿ ವಾಸವಾಗಿದ್ದ ಎನ್ನಲಾಗಿದೆ.
ಅಪರಿಚಿತ ದುಷ್ಕರ್ಮಿಗಳು ಮಂಗಳವಾರ ಮಧ್ಯಾಹ್ನ ಸೌರಬ್ನನ್ನು ಆತ ವಾಸವಾಗಿದ್ದ ಸ್ಥಳದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಬ್ಯಾಟರಾಯನಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.