ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ: ಯುವಕರಿಬ್ಬರು ಮೃತ್ಯು
ಬೆಂಗಳೂರು, ಜೂ.23: ಹೆಲ್ಮೆಟ್ ಧರಿಸದೆ ವೇಗವಾಗಿ ಬೈಕ್ ಚಾಲನೆ ಮಾಡುತ್ತಿದ್ದ ಇಬ್ಬರು ಯುವಕರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಜಿನಗರದ ವೆಂಕಟೇಶ್ ಯಾನೆ ವೆಂಕಟ್(21) ಹಾಗೂ ಲಗ್ಗೆರೆಯ ಚಂದನ್(21) ಮೃತ ದುರ್ದೈವಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ವಿವರ: ಹೆಬ್ಬಾಳದಲ್ಲಿರುವ ಖಾಸಗಿ ಬೈಕ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಇವರಿಬ್ಬರೂ ಗುರುವಾರ ರಾತ್ರಿ 12:45ರ ವೇಳೆ ಕೆಲಸ ಮುಗಿಸಿಕೊಂಡು ತಮ್ಮದೇ ಕಂಪೆನಿಯ ನೋಂದಣಿಯಾಗದ ಹೊಸ ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದರು.
ಮಾರ್ಗಮಧ್ಯೆ ಮಲ್ಲೇಶ್ವರಂ ವೃತ್ತದಿಂದ ದೇವಯ್ಯ ಪಾರ್ಕ್ ಕಡೆಗಿನ ಹೋಗುವ ರೈಲ್ವೆ ಮೇಲ್ಸೇತುವೆ ರಸ್ತೆಯ ವಿಭಜಕಕ್ಕೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಇಬ್ಬರು ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹೆಲ್ಮೆಟ್ ಹಾಕದೆ ಅತಿ ವೇಗವಾಗಿ ಬೈಕ್ ಚಲಾಯಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿರುವ ಮಲ್ಲೇಶ್ವರಂ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.