ಕಾಂಗ್ರೆಸ್ ಉಸ್ತುವಾರಿ ನಾಳೆ ರಾಜ್ಯಕ್ಕೆ ಆಗಮನ
ಚುನಾವಣೆ ಸಿದ್ಧತೆ: ಆರು ದಿನಗಳ ರಾಜ್ಯ ಪ್ರವಾಸ
ಬೆಂಗಳೂರು, ಜೂ. 26: 2018ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನಾಳೆ(ಜೂ.27) ಬೆಂಗಳೂರಿಗೆ ಆಗಮಿಸಲಿದ್ದು, ಆರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳ ಪದಾಧಿಕಾರಿಗಳ ಜತೆ ನಾಳೆ ಸಮಾಲೋಚನೆ ನಡೆಸಲಿದ್ದು, ಜೂ.28ರಂದು ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಯಲಿದ್ದಾರೆ.
ಜೂ.29ಕ್ಕೆ ಸಭೆ: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಜೂ.29 ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಎಸ್.ಆರ್. ಪಾಟೀಲ್ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. ಜೂ.30ಕ್ಕೆ ಬೆಳಗಾವಿಯ ಅಥಣಿಯಲ್ಲಿ ಪಕ್ಷದ ಸಮಾವೇಶ ಏರ್ಪಡಿಸಲಾಗಿದೆ.
ಆ ಬಳಿಕ ಜು.3ಕ್ಕೆ ಮೈಸೂರು ವಿಭಾಗದ ಹಾಸನದಲ್ಲಿ ಸಮಾವೇಶ ನಡೆಯಲಿದ್ದು, ಜು.7ರಂದು ಮಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುವ ದೃಷ್ಟಿಯಿಂದ ವೇಣುಗೋಪಾಲ್ ಕಾರ್ಯತಂತ್ರ ರೂಪಿಸುತ್ತಿದ್ದಾರೆ.
ಬೆಂಗಳೂರಿನಲ್ಲೆ ವಾಸ್ತವ್ಯ: ಪಕ್ಷ ಸಂಘಟನೆಗೆ ಕಟಿಬದ್ಧರಾಗಿರುವ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮುಂದಿನ ತಿಂಗಳಿಂದ ರಾಜ್ಯದಲ್ಲಿ ವಾಸ್ತವ್ಯ ಹೂಡಲಿದ್ದು, ಬೆಂಗಳೂರು ನಗರದಲ್ಲಿ ಮನೆ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.