ಸಂಘಪರಿವಾರದ ಐವರು ಮುಖಂಡರ ವಿರುದ್ಧದ ಎಫ್ಐಆರ್ ತಡೆಗೆ ಹೈಕೋರ್ಟ್ ನಕಾರ
ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ
ಬೆಂಗಳೂರು, ಜು.26: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಕೋಮುಗಲಭೆಯಲ್ಲಿ ಕೊಲೆಯಾದ ಶರತ್ ಮಡಿವಾಳರ ಶವಯಾತ್ರೆಯ ವೇಳೆ ನಿಷೇಧಾಜ್ಞೆ ಉಲ್ಲಂಘಿಸಿ ಸಾವಿರಾರು ಜನರನ್ನು ಅಕ್ರಮ ಕೂಟ ಸೇರಿಸಿ ಗಲಾಟೆ ಎಬ್ಬಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟು ಉಂಟು ಮಾಡಿದ ಆರೋಪ ಸಂಬಂಧ ಸಂಘಪರಿವಾರದ ಐವರು ಮುಖಂಡರ ವಿರುದ್ಧ ಪೊಲೀಸರು ದಾಖಲಿಸಿದ ಎಫ್ಐಆರ್ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ ಸತ್ಯಜಿತ್ ಸುರತ್ಕಲ್, ಹಿಂದೂ ಜಾಗರಣ ವೇದಿಕೆಯ ಹರೀಶ್ ಪೂಂಜಾ, ಹಿಂದೂ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮುರಳಿ ಕೃಷ್ಣ ಹಸಂತಡ್ಕ, ದಕ್ಷಿಣ ಕನ್ನಡ ಜಿಲ್ಲಾ ಬಜರಂಗ ದಳದ ಅಧ್ಯಕ್ಷ ಶರಣ್ ಪಂಪ್ವೆಲ್, ಗೋರಕ್ಷಕ್ ಪ್ರಮುಖ ಸಂಘದ ಪ್ರದೀಪ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಬುಧವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಪ್ರಕರಣದ ಗಂಭೀರತೆ ಪರಿಗಣಿಸಿ ಅರ್ಜಿದಾರರ ವಿರುದ್ಧ ಎಫ್ಐಆರ್ಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ತಮ್ಮ ಕಕ್ಷಿದಾರರು ಗಲಭೆ ಸೃಷ್ಟಿಸಿಲ್ಲ. ರಾಜಕೀಯ ದುರುದ್ದೇಶದಿಂದ, ಕಿರುಕುಳ ಮತ್ತು ಅವಮಾನ ಉಂಟು ಮಾಡಲು ಪೊಲೀಸರು ಸುಳ್ಳು ದೂರು ದಾಖಲಿಸಿದ್ದಾರೆ. ಹೀಗಾಗಿ, ಅರ್ಜಿದಾರರ ವಿರುದ್ಧದ ಎಫ್ಐಆರ್ ರದ್ದುಪಡಿಸಬೇಕು. ಅರ್ಜಿ ಇತ್ಯರ್ಥಪಡಿಸುವವರೆಗೆ ಎಫ್ಐಆರ್ಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು.
ಇದನ್ನು ತೀವ್ರವಾಗಿ ಆಕ್ಷೇಪಿಸಿದ ಸರಕಾರಿ ಅಭಿಯೋಜಕ ರಾಚಯ್ಯ, ಶರತ್ ಕುಮಾರ್ ಮೃತದೇಹ ಮೆರವಣಿಗೆ ವೇಳೆ ಅರ್ಜಿದಾರರು ಸುಮಾರು 2000 ಸಾವಿರ ಜನರನ್ನು ಅಕ್ರಮವಾಗಿ ಸೇರಿಸಿ ಗಲಾಟೆ ಎಬ್ಬಿಸಿದರು. ಘಟನಾ ಸ್ಥಳದಲ್ಲಿ ಅರ್ಜಿದಾರರು ಇದ್ದು, ಗಲಾಟೆ ನಡೆಯಲು ಕುಮ್ಮಕ್ಕು ನೀಡಿದ್ದರು. ಸ್ಥಳದಲ್ಲಿದ್ದ ಬಂಟ್ವಾಳ ನಗರ ಠಾಣಾ ಇನ್ಸ್ಪೆಕ್ಟರ್ ರಕ್ಷಿತ್ ಅವರು ಎಲ್ಲ ಬೆಳವಣಿಗೆ ಗಮನಿಸಿ ದೂರು ದಾಖಲಿಸಲಾಗಿದೆ. ಪ್ರಕರಣ ಗಂಭೀರತೆಯಿಂದ ಕೂಡಿದ್ದು, ಎಫ್ಐಆರ್ಗೆ ತಡೆಯಾಜ್ಞೆ ನೀಡಿದರೆ ತನಿಖೆಗೆ ತೊಂದರೆಯಾಗಲಿದೆ. ಹೀಗಾಗಿ, ಎಫ್ಐಆರ್ಗೆ ತಡೆಯಾಜ್ಞೆ ನೀಡಬಾರದು ಎಂದು ಕೋರಿದರು. ಈ ವಾದ ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ತನಿಖೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು.