ಡಾಂಬರೀಕರಣದಲ್ಲಿ ಅವ್ಯವಹಾರ ನಡೆದಿಲ್ಲ: ಮೇಯರ್ ಪದ್ಮಾವತಿ
ಬೆಂಗಳೂರು, ಸೆ. 13: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಹಾಳಾಗಿವೆ. ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುವ ಕಡೆ ಮಾತ್ರ ಗುಂಡಿಗಳು ಬಿದ್ದಿವೆ. ಬಿಬಿಎಂಪಿ ಸೂಕ್ತ ಟೆಂಡರ್ ಮೂಲಕವೇ ಕಾಮಗಾರಿ ಮಾಡಿಸಲಾಗಿದೆ ಎಂದು ಮೇಯರ್ ಜಿ.ಪದ್ಮಾವತಿ ತಿಳಿಸಿದ್ದಾರೆ.
ನಗರದಲ್ಲಿ ರಸ್ತೆ ಡಾಂಬರೀಕರಣದಲ್ಲಿ ಸಾವಿರಾರು ಕೋಟಿ ರೂ.ಗಳ ಅಕ್ರಮ ನಡೆದಿದೆ ಎಂದು ಎನ್.ಆರ್.ರಮೇಶ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ವೆುೀಯರ್, ಅಪಾರ ಪ್ರಮಾಣದಲ್ಲಿ ಮಳೆ ಬಂದಿದ್ದರಿಂದ ರಸ್ತೆಗಳು ಹಾಳಾಗಿವೆ ಹೊರತು, ಕಳಪೆ ಡಾಂಬರೀಕರಣದಿಂದ ಅಲ್ಲ. ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಹೇಳಿದರು.
ಕಾನೂನಾತ್ಮಕವಾಗಿ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಅಕ್ರಮ ನಡೆಯಲು ಸಾಧ್ಯವಿಲ್ಲ. ಕಾಮಗಾರಿ ಗುಣಮಟ್ಟ ಪರಿಶೀಲನೆಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡವಿದೆ. ಟಿವಿಸಿಸಿ ವರದಿಯಲ್ಲಿ ಎಲ್ಲಿಯೂ ಕಳಪೆ ಕಾಮಗಾರಿ ಎಂದು ನಮೂದಿಸಿಲ್ಲ. ನಾವು ಗುಣಮಟ್ಟವನ್ನು ಕಾಯ್ದುಕೊಂಡಿದ್ದೇವೆ. ಆದರೆ, ಪ್ರಕೃತಿ ವಿಕೋಪದಿಂದ ರಸ್ತೆ ಹಾಳಾಗಿವೆ. ಅವುಗಳನ್ನು ಸರಿಪಡಿಸುತ್ತೇವೆ. ಆದರೆ, ರಮೇಶ್ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.